ಬಲಾತ್ಕಾರ ದುಷ್ಪ್ರೇರಣೆಗಳಿಂದ ತಪ್ಪಿಸಬೇಕೆಂಬ ಪ್ರಾರ್ಥನೆ 
 ೧೪೧
ದಾವೀದನ ಕೀರ್ತನೆ. 
(ಕೀರ್ತ. 140) 
 ೧ ಯೆಹೋವನೇ, ಮೊರೆಯಿಡುತ್ತೇನೆ, 
ಬೇಗನೆ ಬಾ, ನಾನು ಮೊರೆಯಿಡುವಾಗ ನನ್ನ ಕೂಗನ್ನು ಲಾಲಿಸು. 
 ೨ ನನ್ನ ಪ್ರಾರ್ಥನೆಯು ಧೂಪದಂತೆಯೂ, 
ನಾನು ಕೈಯೆತ್ತುವುದು ಸಂಧ್ಯಾನೈವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ. 
 ೩ ಯೆಹೋವನೇ, ನನ್ನ ಬಾಯಿಗೆ ಕಾವಲಿರಿಸು, 
ನನ್ನ ತುಟಿಗಳೆಂಬ ಕದವನ್ನು ಕಾಯಿ. 
 ೪ ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ, 
ನಾನು ದುಷ್ಟರೊಡನೆ ಸೇರಿ ಕೆಟ್ಟ ಕೆಲಸಗಳನ್ನು ನಡೆಸದಂತೆಯೂ ನನ್ನನ್ನು ಕಾಪಾಡು. 
ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ. 
 ೫ ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ, 
ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ, 
ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. 
ಆದರೆ ದುಷ್ಟರ ಕೆಟ್ಟತನಕ್ಕೆ ವಿರುದ್ಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು. 
 ೬ ಅವರ ಪ್ರಮುಖರು ಕಡುಬಂಡೆಯಿಂದ ಕೆಳಕ್ಕೆ ದೊಬ್ಬಲ್ಪಟ್ಟ ಮೇಲೆ, 
ಜನರು ನನ್ನ ಮಾತುಗಳಿಗೆ ಕಿವಿಗೊಡುವರು, 
ಅವು ಅವರಿಗೆ ಹಿತವಾಗಿರುವವು. 
 ೭ ಒಬ್ಬನು ಹೊಲವನ್ನು ಉಳುತ್ತಾ, 
ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ, 
ನಮ್ಮ ಎಲುಬುಗಳು ಪಾತಾಳದ್ವಾರದಲ್ಲಿ ಚದರಿಸಲ್ಪಟ್ಟಿರುತ್ತವೆ. 
 ೮ ಕರ್ತನೇ, ಯೆಹೋವನೇ, ನನ್ನ ದೃಷ್ಟಿ ನಿನ್ನಲ್ಲಿದೆ, 
ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ, 
ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡ. 
 ೯ ಕೆಡುಕರ ಉರುಲಿನಲ್ಲಿ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು, 
ಅವರು ಬೀಸಿಟ್ಟಿರುವ ಬಲೆಯಿಂದ ನನ್ನನ್ನು ತಪ್ಪಿಸು. 
 ೧೦ ದುಷ್ಟರು ತಮ್ಮ ಬಲೆಯಲ್ಲಿ ತಾವೇ ಬಿದ್ದುಹೋಗಲಿ, 
ಆಗ ನಾನು ತಪ್ಪಿಸಿಕೊಳ್ಳುವೆನು.