ಯೆಹೋವನಿಂದ ಅಭಿಷೇಕಿಸಲ್ಪಟ್ಟವನ ಸರ್ವಾಧಿಪತ್ಯ 
 ೨
 ೧ ಅನ್ಯಜನಾಂಗಗಳು ದಂಗೆಗೆ ಏಳುವುದೂ, 
ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ? 
 ೨ ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. 
ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ, 
 ೩ “ನಮಗೆ ಅವರು ಹಾಕಿದ ಬಂಧನಗಳನ್ನು ಕಿತ್ತುಹಾಕಿ, 
ಬೇಡಿಗಳನ್ನು ಮುರಿದು ಬಿಸಾಡೋಣ” ಎಂದು ಮಾತನಾಡಿಕೊಳ್ಳುತ್ತಾರಲ್ಲಾ. 
 ೪ ಪರಲೋಕದಲ್ಲಿ ಆಸೀನನಾಗಿರುವಾತನು ಅದಕ್ಕೆ ನಗುವನು; 
ಕರ್ತನು ಅವರನ್ನು ಪರಿಹಾಸ್ಯಮಾಡುವನು. 
 ೫ ಅನಂತರ ಆತನು ಸಿಟ್ಟಾಗಿ, ಕೋಪಾವೇಶದಿಂದ ಅವರನ್ನು ಕಳವಳಗೊಳಿಸಿ, 
 ೬ “ನಾನು ನೇಮಿಸಿದ ಅರಸನನ್ನು 
ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು. 
 ೭ ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; 
ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ. 
 ೮ ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು; 
ಭೂಮಿಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವಾಸ್ತ್ಯವಾಗಿ ಕೊಡುವೆನು. 
 ೯ ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; 
ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ” ಎಂದು ಹೇಳಿದನು. 
 ೧೦ ಆದುದರಿಂದ ಅರಸುಗಳಿರಾ, ವಿವೇಕಿಗಳಾಗಿರ್ರಿ; 
ದೇಶಾಧಿಪತಿಗಳಿರಾ, ಬುದ್ಧಿವಾದಕ್ಕೆ ಕಿವಿಗೊಡಿರಿ. 
 ೧೧ ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ; 
ನಡುಗುತ್ತಾ ಉಲ್ಲಾಸಪಡಿರಿ. 
 ೧೨ ಆತನ ಮಗನಿಗೆ ಮುದ್ದಿಡಿರಿ; 
ಇಲ್ಲವಾದರೆ ಆತನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. 
ಆತನನ್ನು ಆಶ್ರಯಿಸುವವರೆಲ್ಲರು ಧನ್ಯರು.