ಶತ್ರುಬಾಧಿತನಾದ ಸದ್ಭಕ್ತನ ವಿಜ್ಞಾಪನೆಯೂ ಸ್ತೋತ್ರವೂ 
 ೫೭
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಅಲ್ತಷ್ಖೇತೆಂಬ ರಾಗ; ದಾವೀದನು ಸೌಲನ ಭೀತಿಯಿಂದ ಓಡಿಹೋಗಿ ಗುಹೆಯಲ್ಲಿ ಅಡಗಿಕೊಂಡಿದ್ದಾಗ ರಚಿಸಿದ ಕಾವ್ಯ. 
 ೧ ದೇವರೇ, ಕರುಣಿಸು, ನನ್ನನ್ನು ಕರುಣಿಸು. 
ನೀನೇ ನನ್ನ ಆಶ್ರಯಸ್ಥಾನವಲ್ಲವೇ! 
ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು. 
 ೨ ಪರಾತ್ಪರನಾದ ದೇವರಿಗೆ ಮೊರೆಯಿಡುವೆನು, 
ನನ್ನ ಕಾರ್ಯವನ್ನು ಸಫಲಮಾಡುವ ದೇವರನ್ನು ಕೂಗಿ ಕರೆಯುವೆನು. 
 ೩ ಆತನು ಪರಲೋಕದಿಂದ ಆಲಿಸಿ, 
ನಿಂದಕರ ಮಾತಿನಿಂದ ನನ್ನನ್ನು ತಪ್ಪಿಸುವನು; 
ಸೆಲಾ 
 ತನ್ನ ಪ್ರೀತಿಯನ್ನು ಮತ್ತು ಸತ್ಯತೆಯನ್ನೂ ತೋರ್ಪಡಿಸುವನು. 
 ೪ ಸಿಂಹಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; 
ಬೆಂಕಿಕಾರುವ ಮನುಷ್ಯರ ನಡುವೆ ಬಿದ್ದಿದ್ದೇನೆ. 
ಅವರ ಹಲ್ಲುಗಳು ಈಟಿ ಮತ್ತು ಬಾಣಗಳಂತಿವೆ, 
ನಾಲಿಗೆಗಳು ಹದವಾದ ಕತ್ತಿಗಳೇ. 
 ೫ ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; 
ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ. 
 ೬ ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; 
ನನ್ನ ಪ್ರಾಣವು ಕುಂದಿಹೋಯಿತು. 
ನನ್ನ ದಾರಿಯಲ್ಲಿ ಕುಣಿಯನ್ನು ಅಗಿದರು; 
ತಾವೇ ಅದರಲ್ಲಿ ಬಿದ್ದುಹೋದರು. 
ಸೆಲಾ 
  ೭ ದೇವರೇ, ನನ್ನ ಹೃದಯವು ಸ್ಥಿರವಾಗಿದೆ, ಸ್ಥಿರವಾಗಿದೆ. 
ನಾನು ವಾದ್ಯಗಳನ್ನು ನುಡಿಸುತ್ತಾ ಹಾಡುವೆನು. 
 ೮ ನನ್ನ ಮನವೇ, ಚುರುಕಾಗು; ಸ್ವರಮಂಡಲವೇ, ಕಿನ್ನರಿಯೇ, ಎಚ್ಚರವಾಗಿರಿ. 
ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು. 
 ೯ ಕರ್ತನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; 
ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು. 
 ೧೦ ಏಕೆಂದರೆ ನಿನ್ನ ಕೃಪೆಯು ಆಕಾಶವನ್ನೂ, 
ನಿನ್ನ ಸತ್ಯತೆಯು ಮುಗಿಲನ್ನೂ ಮುಟ್ಟುವಷ್ಟು ದೊಡ್ಡವಾಗಿವೆ. 
 ೧೧ ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; 
ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.