29
ಯೆಹೂದದ ಅರಸನಾದ ಹಿಜ್ಕೀಯ
ಹಿಜ್ಕೀಯನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಪಟ್ಟಕ್ಕೆ ಬಂದನು. ಅವನು ಜೆರುಸಲೇಮಿನಲ್ಲಿದ್ದುಕೊಂಡು ಇಪ್ಪತ್ತೊಂಭತ್ತು ವರ್ಷ ರಾಜ್ಯಭಾರ ಮಾಡಿದನು. ಅವನ ತಾಯಿ ಜೆಕರ್ಯನ ಮಗಳಾದ ಅಬೀಯಳು. ಹಿಜ್ಕೀಯನು ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನಿಗೆ ಸರಿಯಾಗಿ ನಡೆದುಕೊಂಡನು. ಅವನು ದೇವರ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದುಕೊಂಡನು.
ಹಿಜ್ಕೀಯನು ದೇವಾಲಯದ ಬಾಗಿಲುಗಳನ್ನು ದುರಸ್ತಿಮಾಡಿ ಭದ್ರಪಡಿಸಿದನು; ತನ್ನ ಆಳ್ವಿಕೆಯ ಮೊದಲನೇ ವರ್ಷದ ಮೊದಲಿನ ತಿಂಗಳಿನಲ್ಲಿಯೇ ದೇವಾಲಯವನ್ನು ಮತ್ತೆ ತೆರೆಯಿಸಿದನು. 4-5 ಹಿಜ್ಕೀಯನು ಎಲ್ಲಾ ಯಾಜಕರನ್ನೂ ಲೇವಿಯರನ್ನೂ ಕರೆದು ದೇವಾಲಯದ ಪೂರ್ವದಿಕ್ಕಿನಲ್ಲಿದ್ದ ಅಂಗಳದಲ್ಲಿ ಒಟ್ಟುಗೂಡಿಸಿ ಅವರಿಗೆ, “ನನ್ನ ಮಾತುಗಳನ್ನು ಕೇಳಿರಿ. ಲೇವಿಯರೇ, ನೀವು ನಿಮ್ಮನ್ನು ಪವಿತ್ರ ಸೇವೆಗೆ ಸಿದ್ಧಮಾಡಿಕೊಳ್ಳಿರಿ. ಯೆಹೋವ ದೇವರ ಆಲಯವನ್ನು ಪವಿತ್ರ ಸೇವೆಗಾಗಿ ಶುದ್ಧಮಾಡಿರಿ. ನಮ್ಮ ಪೂರ್ವಿಕರು ಸೇವೆಮಾಡಿದ ದೇವರು ಆತನೇ. ದೇವಾಲಯದೊಳಗೆ ಇರಬಾರದ ವಸ್ತುಗಳನ್ನು ತೆಗೆದು ಹೊರಗೆಹಾಕಿರಿ. ಅವು ದೇವರ ಆಲಯವನ್ನು ಹೊಲಸು ಮಾಡುತ್ತವೆ. ನಮ್ಮ ಪೂರ್ವಿಕರು ಯೆಹೋವನನ್ನು ತೊರೆದು ಆತನ ದೃಷ್ಟಿಯಲ್ಲಿ ಪಾಪಮಾಡಿದರು; ಆತನ ಆಲಯಕ್ಕೆ ವಿಮುಖರಾದರು. ಅವರು ದೇವಾಲಯದ ಮಂಟಪದ ಬಾಗಿಲನ್ನು ಮುಚ್ಚಿ ಉರಿಯುತ್ತಿದ್ದ ದೀಪಗಳನ್ನು ನಂದಿಸಿಬಿಟ್ಟರು. ಇಸ್ರೇಲ್ ದೇವರಾದ ಯೆಹೋವನಿಗೆ ಪವಿತ್ರ ಸ್ಥಳದಲ್ಲಿ ಧೂಪಸುಡುವದನ್ನೂ ಸರ್ವಾಂಗಹೋಮಗಳನ್ನು ಅರ್ಪಿಸುವದನ್ನೂ ನಿಲ್ಲಿಸಿದರು. ಆದ್ದರಿಂದ ಯೆಹೋವನು ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಬಹು ಕೋಪಗೊಂಡು ಅವರನ್ನು ಶಿಕ್ಷಿಸಿದನು. ಯೆಹೋವನು ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಮಾಡಿದ್ದ ಸಂಗತಿಗಳನ್ನು ನೋಡಿದ ಅನ್ಯರು ಗೇಲಿ ಮಾಡುತ್ತ ವೈರತ್ವದಿಂದ ತಲೆಯಾಡಿಸಿದರು. ಇವೆಲ್ಲಾ ಸತ್ಯವೆಂದು ನಿಮಗೆ ತಿಳಿದದೆ. ಇದನ್ನು ನಿಮ್ಮ ಸ್ವಂತ ಕಣ್ಣುಗಳಿಂದ ನೋಡಿದ್ದೀರಿ. ನಮ್ಮ ಜನರು ರಣರಂಗದಲ್ಲಿ ಕೊಲ್ಲಲ್ಪಟ್ಟರು; ನಮ್ಮ ಹೆಂಡತಿಮಕ್ಕಳು ಸೆರೆಹಿಡಿಯಲ್ಪಟ್ಟರು. 10 ಆದ್ದರಿಂದ ಹಿಜ್ಕೀಯನಾದ ನಾನು ಇಸ್ರೇಲರ ದೇವರಾದ ಯೆಹೋವನೊಂದಿಗೆ ಒಡಂಬಡಿಕೆ ಮಾಡುತ್ತೇನೆ. ಆತನು ಇನ್ನು ಮುಂದೆ ನಮ್ಮ ಮೇಲೆ ಸಿಟ್ಟುಗೊಳ್ಳುವುದಿಲ್ಲ. 11 ಆದ್ದರಿಂದ ನನ್ನ ಪ್ರಿಯ ಮಕ್ಕಳೇ, ಉದಾಸೀನ ಮಾಡಬೇಡಿರಿ; ಸಮಯವನ್ನು ಹಾಳುಮಾಡಬೇಡಿ. ತನ್ನ ಸೇವೆಮಾಡುವದಕ್ಕಾಗಿ ಆತನು ನಿಮ್ಮನ್ನು ಆರಿಸಿರುತ್ತಾನೆ. ತನ್ನ ಆಲಯದಲ್ಲಿ ಸೇವೆಮಾಡುವುದಕ್ಕೂ ಧೂಪವನ್ನು ಆತನ ಮುಂದೆ ಸುಡುವದಕ್ಕೂ ನಿಮ್ಮನ್ನು ನೇಮಿಸಿರುತ್ತಾನೆ” ಎಂದು ಹೇಳಿದನು.
12-14 ದೇವಾಲಯದಲ್ಲಿ ಸೇವೆಮಾಡಲು ಪ್ರಾರಂಭಿಸಿದ ಲೇವಿಯರ ಪಟ್ಟಿ:
 
ಕೆಹಾತ್ಯನ ಕುಟುಂಬದ ಅಮಾಸೈಯ ಮಗನಾದ ಮಹತ್ ಮತ್ತು ಅಜರ್ಯನ ಮಗನಾದ ಯೋವೇಲ್;
ಮೆರಾರೀಯ ಸಂತತಿಯಲ್ಲಿ ಅಬ್ದೀಯ ಮಗನಾದ ಕೀಷ, ಯೆಹಲ್ಲೆಲೇಲನ ಮಗನಾದ ಅಜರ್ಯ;
ಗೆರ್ಷೋನ್ಯನ ಸಂತತಿಯಲ್ಲಿ ಜಿಮ್ಮನ ಮಗನಾದ ಯೋವಾಹ,
ಯೋವಾಹನ ಮಗನಾದ ಏದೆನ್; ಎಲೀಚಾಫಾನ್ಯನ ಸಂತತಿಯಲ್ಲಿ ಶಿಮ್ರಿ ಮತ್ತು ಯೆಗೀಯೇಲ್;
ಆಸಾಫಾನ ಸಂತತಿಯವರಿಂದ ಜೆಕರ್ಯ ಮತ್ತು ಮತ್ತನ್ಯ;
ಹೇಮಾನನ ಸಂತತಿಯಿಂದ ಯೆಹೀಯೇಲ್ ಮತ್ತು ಶಿಮ್ಮೀ;
ಯೆದೂತೂನನ ಸಂತತಿಯಲ್ಲಿ ಶೆಮಾಯ ಮತ್ತು ಉಜ್ಜೀಯೇಲ್.
 
15 ಈ ಲೇವಿಯರೆಲ್ಲಾ ಒಟ್ಟಾಗಿ ಸೇರಿ ತಮ್ಮ ಸಹೋದರರೊಂದಿಗೆ ದೇವಾಲಯದ ಪವಿತ್ರ ಸೇವೆಯನ್ನು ಆರಂಭಿಸಲು ಸಿದ್ಧರಾದರು; ಅರಸನ ಮೂಲಕವಾಗಿ ಬಂದ ದೇವರ ಆಜ್ಞೆಗೆ ವಿಧೇಯರಾದರು; ದೇವಾಲಯವನ್ನು ಶುದ್ಧೀಕರಿಸಲು ಪ್ರಾರಂಭಿಸಿದರು. 16 ಯಾಜಕರು ದೇವಾಲಯದ ಒಳಭಾಗವನ್ನು ಪ್ರವೇಶಿಸಿ ಶುಚಿಮಾಡಿದರು. ದೇವಾಲಯದೊಳಗೆ ಇದ್ದ ಎಲ್ಲಾ ಹೊಲಸು ವಸ್ತುಗಳನ್ನು ಹೊರತೆಗೆದರು. ದೇವಾಲಯದ ಅಂಗಳಕ್ಕೆ ತಂದು ಅಲ್ಲಿಂದ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಬಿಸಾಡಿದರು. 17 ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಲೇವಿಯರು ಪವಿತ್ರ ಸೇವೆಯನ್ನು ಮಾಡಲು ಸಿದ್ಧರಾದರು. ತಿಂಗಳಿನ ಎಂಟನೆಯ ದಿನದಲ್ಲಿ ದೇವಾಲಯದ ಮಂಟಪಕ್ಕೆ ಲೇವಿಯರು ಬಂದರು. ಎಂಟು ದಿನಗಳಲ್ಲಿ ಅವರು ದೇವಾಲಯವನ್ನೆಲ್ಲಾ ಶುಚಿಮಾಡಿದರು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಅವರು ಶುಚಿಮಾಡುವ ಕಾರ್ಯವನ್ನು ಮುಗಿಸಿದರು.
18 ಅನಂತರ ಅವರು ಅರಸನಾದ ಹಿಜ್ಕೀಯನ ಬಳಿಗೆ ಹೋಗಿ, “ಅರಸನಾದ ಹಿಜ್ಕೀಯನೇ, ನಾವು ದೇವಾಲಯವನ್ನೂ ಯಜ್ಞವೇದಿಕೆಯನ್ನೂ ದೇವಾಲಯದ ಸಾಮಾಗ್ರಿಗಳನ್ನೂ ಶುದ್ಧ ಮಾಡಿದೆವು. ರೊಟ್ಟಿಯನ್ನಿಡುವ ಮೇಜನ್ನೂ ಶುದ್ಧ ಮಾಡಿದೆವು. 19 ಆಹಾಜನು ಅರಸನಾಗಿದ್ದ ಕಾಲದಲ್ಲಿ ಅವನು ದೇವರಿಗೆ ವಿರುದ್ಧವಾಗಿ ಎದ್ದನು. ದೇವಾಲಯದೊಳಗಿದ್ದ ಅನೇಕ ವಸ್ತುಗಳನ್ನು ಎತ್ತಿ ಬಿಸಾಡಿದನು. ಆದರೆ ನಾವು ಅವುಗಳನ್ನೆಲ್ಲಾ ಮತ್ತೆ ಯಥಾ ಸ್ಥಾನದಲ್ಲಿರಿಸಿ ಅದರ ವಿಶೇಷ ಉಪಯೋಗಕ್ಕಾಗಿ ಸಿದ್ಧಪಡಿಸಿದೆವು. ಈಗ ಅವು ಯೆಹೋವನ ವೇದಿಕೆಯ ಮುಂದೆ ಇಡಲ್ಪಟ್ಟಿವೆ” ಎಂದು ಹೇಳಿದರು.
20 ಹಿಜ್ಕೀಯ ಅರಸನು ಪಟ್ಟಣದ ಅಧಿಕಾರಿಗಳನ್ನು ಮುಂಜಾನೆ ಕರೆಯಿಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು. 21 ಅವರು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಆಡುಗಳನ್ನೂ ತಂದರು. ಈ ಪ್ರಾಣಿಗಳನ್ನೆಲ್ಲಾ ಇಡೀ ಯೆಹೂದ ಪ್ರಾಂತ್ಯದಲ್ಲಿರುವ ಪ್ರಜೆಯವರಿಗಾಗಿ, ದೇವಾಲಯದ ಶುದ್ಧೀಕರಣಕ್ಕಾಗಿ ಮತ್ತು ಯೆಹೂದ ರಾಜ್ಯಕ್ಕಾಗಿ ಪಾಪಪರಿಹಾರ ಯಜ್ಞವಾಗಿ ಅರ್ಪಿಸಿದರು. ಅರಸನಾದ ಹಿಜ್ಕೀಯನು ಆರೋನನ ಸಂತತಿಯವರಾದ ಯಾಜಕರಿಗೆ ಆ ಪಶುಗಳನ್ನು ಯೆಹೋವನ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮಮಾಡಲು ಆಜ್ಞಾಪಿಸಿದನು. 22 ಯಾಜಕರು ಹೋರಿಗಳನ್ನು ವಧಿಸಿ ಅದರ ರಕ್ತವನ್ನು ಯಜ್ಞವೇದಿಕೆಯ ಮೇಲೆ ಚಿಮಿಕಿಸಿದರು. ಅನಂತರ ಕುರಿಮರಿಗಳನ್ನು ವಧಿಸಿ ಅದರ ರಕ್ತವನ್ನೂ ಯಜ್ಞವೇದಿಕೆಯ ಮೇಲೆ ಚಿಮಿಕಿಸಿದರು. 23-24 ಆ ಬಳಿಕ ಯಾಜಕರು ಹೋತಗಳನ್ನು ಅರಸನ ಮತ್ತು ಸೇರಿಬಂದ ಜನಗಳ ಮುಂದೆ ಪಾಪಪರಿಹಾರಕ ಯಜ್ಞಕ್ಕಾಗಿ ತಂದರು. ಯಾಜಕರು ಅವುಗಳ ಮೇಲೆ ಕೈಯಿಟ್ಟು ವಧಿಸಿದರು. ಅದರ ರಕ್ತವನ್ನು ಯಜ್ಞವೇದಿಕೆಯ ಮೇಲೆ ಪಾಪಪರಿಹಾರಕ ಯಜ್ಞವಾಗಿ ಸಮರ್ಪಿಸಿದರು. ದೇವರು ಇಸ್ರೇಲರ ಪಾಪಗಳನ್ನು ಕ್ಷಮಿಸುವಂತೆ ಅವರು ಹೀಗೆ ಮಾಡಿದರು. ಸರ್ವಾಂಗಹೋಮಗಳನ್ನೂ ಪಾಪಪರಿಹಾರಕ ಯಜ್ಞಗಳನ್ನೂ ಇಸ್ರೇಲಿನ ಸಮಸ್ತ ಜನರಿಗಾಗಿ ಅರ್ಪಿಸಬೇಕೆಂದು ರಾಜನು ಆಜ್ಞಾಪಿಸಿದ್ದನು.
25 ದಾವೀದನೂ ಅರಸನ ದರ್ಶಿಯಾಗಿದ್ದ ಗಾದನೂ ಮತ್ತು ಪ್ರವಾದಿಯಾಗಿದ್ದ ನಾತಾನನೂ ಆಜ್ಞಾಪಿಸಿದಂತೆ, ಅರಸನಾದ ಹಿಜ್ಕೀಯನು ಲೇವಿಯರನ್ನು ತಾಳ, ತಂತಿವಾದ್ಯ ಮತ್ತು ಕಿನ್ನರಿಗಳೊಂದಿಗೆ ದೇವಾಲಯದಲ್ಲಿ ಇರಿಸಿದನು. ಈ ಆಜ್ಞೆಯು ಯೆಹೋವನಿಂದ ಪ್ರವಾದಿಗಳ ಮೂಲಕ ಬಂದಿತ್ತು. 26 ಹೀಗೆ ಲೇವಿಯರು ದಾವೀದನ ಸಂಗೀತ ವಾದ್ಯಗಳೊಡನೆ ತಯಾರಾಗಿ ನಿಂತರು ಮತ್ತು ಯಾಜಕರು ತುತ್ತೂರಿಗಳೊಂದಿಗೆ ತಯಾರಾಗಿ ನಿಂತರು. 27 ಆ ಬಳಿಕ ಹಿಜ್ಕೀಯನು ಸರ್ವಾಂಗಹೋಮವನ್ನು ಅರ್ಪಿಸಲು ಆಜ್ಞಾಪಿಸಿದನು. ಸರ್ವಾಂಗಹೋಮ ಆರಂಭವಾದ ಕೂಡಲೇ ದೇವರಿಗೆ ಸ್ತೋತ್ರಗಾನ ಹಾಡುವದೂ ಪ್ರಾರಂಭವಾಯಿತು. ತುತ್ತೂರಿಯನ್ನು ಊದಿ ದಾವೀದನ ವಾದ್ಯಗಳನ್ನು ಬಾರಿಸಿದರು. 28 ಸೇರಿ ಬಂದಿದ್ದ ಜನಸಮೂಹದವರು ಸಾಷ್ಟಾಂಗನಮಸ್ಕಾರ ಮಾಡಿದರು. ಯಜ್ಞವು ಮುಗಿಯುವ ತನಕ ದೇವರ ಸ್ತೋತ್ರಗಾನ ಮುಂದುವರಿಯಿತು.
29 ಯಜ್ಞಸಮರ್ಪಣೆ ಮುಗಿದ ಬಳಿಕ ಅರಸನಾದ ಹಿಜ್ಕೀಯನೂ ಪ್ರಜೆಗಳೂ ಯೆಹೋವನಿಗೆ ಸಾಷ್ಟಾಂಗನಮಸ್ಕಾರ ಮಾಡಿದರು. 30 ರಾಜನಾದ ಹಿಜ್ಕೀಯನು ಮತ್ತು ಅವನ ಅಧಿಕಾರಿಗಳು ಯೆಹೋವನಿಗೆ ಸ್ತೋತ್ರ ಮಾಡಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಆಸಾಫ ಮತ್ತು ಅರಸನಾಗಿದ್ದ ದಾವೀದನು ರಚಿಸಿದ್ದ ಹಾಡುಗಳನ್ನು ಗಾಯಕರು ಹಾಡಿ ದೇವರನ್ನು ಸ್ತುತಿಸಿದರು. ಹೀಗೆ ಜನರೆಲ್ಲಾ ಸಂತೋಷಪಟ್ಟರು. ಅವರೆಲ್ಲರು ಅಡ್ಡಬಿದ್ದು ದೇವರನ್ನು ಆರಾಧಿಸಿದರು. 31 ಹಿಜ್ಕೀಯನು ಜನರಿಗೆ, “ಯೆಹೂದದ ಜನರೇ, ನೀವೀಗ ನಿಮ್ಮನ್ನು ಯೆಹೋವನಿಗೆ ಒಪ್ಪಿಸಿದ್ದೀರಿ. ನೀವೀಗ ಬಂದು ದೇವಾಲಯದಲ್ಲಿ ನಿಮ್ಮನಿಮ್ಮ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ” ಎಂದು ಹೇಳಲು ಜನರು ತಮ್ಮ ಯಜ್ಞಗಳನ್ನು ಸಮರ್ಪಿಸಲು ಮುಂದೆ ಬಂದರು. ಸರ್ವಾಂಗಹೋಮ ಅರ್ಪಿಸಬೇಕೆಂದಿದ್ದವರು ಸರ್ವಾಂಗಹೋಮಗಳನ್ನು ಅರ್ಪಿಸಿದರು. 32 ಹೀಗೆ ಒಟ್ಟು ಎಪ್ಪತ್ತು ಹೋರಿಗಳನ್ನೂ ನೂರು ಟಗರುಗಳನ್ನೂ ಇನ್ನೂರು ಕುರಿಗಳನ್ನೂ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿದರು. 33 ಪವಿತ್ರ ಯಜ್ಞಕ್ಕಾಗಿ ಆರುನೂರು ಹೋರಿಗಳನ್ನೂ ಮೂರುಸಾವಿರ ಆಡುಕುರಿಗಳನ್ನೂ ಸಮರ್ಪಿಸಿದರು. 34 ಅಲ್ಲಿ ಪಶುಗಳನ್ನು ವಧಿಸಿ ಅದರ ಚರ್ಮಸುಲಿದು ಯಜ್ಞಕ್ಕಾಗಿ ಸಿದ್ಧಪಡಿಸಲು ಸಾಕಷ್ಟು ಯಾಜಕರು ಇರಲಿಲ್ಲ. ಆಗ ಅವರ ಬಂಧುಗಳಾದ ಲೇವಿಯರು ಬಂದು ಆ ಕೆಲಸ ಮುಗಿಯುವ ತನಕ ಅವರಿಗೆ ಸಹಾಯಮಾಡಿದರು. ಯೆಹೋವನ ಸೇವೆಗೆ ತಮ್ಮನ್ನು ಸಿದ್ಧಪಡಿಸಿಕೊಳ್ಳಲು ಲೇವಿಯರು ಯಾಜಕರಿಗಿಂತ ಉತ್ಸುಕತೆಯಲ್ಲಿದ್ದರು. 35 ಆ ದಿವಸ ಎಷ್ಟೋ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಪಾನದ್ರವ್ಯದ ಹೋಮಗಳನ್ನೂ ಸಮರ್ಪಿಸಿದರು. ಹೀಗೆ ದೇವಾಲಯದಲ್ಲಿ ಆರಾಧನೆಯು ಮತ್ತೆ ಪ್ರಾರಂಭವಾಯಿತು. 36 ದೇವರು ಅವುಗಳನ್ನು ತನ್ನ ಜನರಿಗಾಗಿ ಸಿದ್ಧಪಡಿಸಿದ್ದಕ್ಕಾಗಿಯೂ ಅದನ್ನು ಅಲ್ಪಕಾಲಾವಧಿಯಲ್ಲಿ ಮಾಡಿದ್ದಕ್ಕಾಗಿಯೂ ಹಿಜ್ಕೀಯನು ಮತ್ತು ಯೆಹೂದದ ಜನರು ಸಂತೋಷಪಟ್ಟರು.