ಕೊರಿಂಥದವರಿಗೆ
ಬರೆದ ಎರಡನೆ ಪತ್ರ
1
ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಬರೆಯುವ ಪತ್ರ. ನಾನು ದೇವರ ಚಿತ್ತಾನುಸಾರ ಅಪೊಸ್ತಲನಾಗಿದ್ದೇನೆ. ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಇಡೀ ಅಖಾಯ ಸೀಮೆಯಲ್ಲಿರುವ ದೇವಜನರೆಲ್ಲರಿಗೂ ನಾನು ಈ ಪತ್ರವನ್ನು ಕ್ರಿಸ್ತನಲ್ಲಿ ನಮ್ಮ ಸಹೋದರನಾದ ತಿಮೊಥೆಯನೊಡನೆ ಸೇರಿ ಬರೆಯುತ್ತಿದ್ದೇನೆ.
ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
ಪೌಲನು ದೇವರಿಗೆ ಸಲ್ಲಿಸುವ ಕೃತಜ್ಞತಾಸ್ತುತಿ
ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ. ದೇವರು ಕನಿಕರದಿಂದ ತುಂಬಿರುವ ತಂದೆಯಾಗಿದ್ದಾನೆ. ಆತನು ಸಕಲ ವಿಧವಾಗಿ ಸಂತೈಸುವ ದೇವರಾಗಿದ್ದಾನೆ. ನಮಗೆ ಸಂಕಷ್ಟವಿರುವಾಗಲೆಲ್ಲಾ ಆತನು ನಮ್ಮನ್ನು ಸಂತೈಸುತ್ತಾನೆ; ಸಂಕಷ್ಟಗಳಲ್ಲಿರುವ ಇತರ ಜನರನ್ನು ಸಂತೈಸಲು ಇದರ ಮೂಲಕ ನಾವು ಸಹ ಶಕ್ತರಾಗುತ್ತೇವೆ. ದೇವರು ನಮ್ಮನ್ನು ಸಂತೈಸುವಂತೆಯೇ ನಾವು ಸಹ ಅವರನ್ನು ಸಂತೈಸಬಲ್ಲವರಾಗುತ್ತೇವೆ. ನಾವು ಕ್ರಿಸ್ತನ ಅನೇಕ ಬಾಧೆಗಳಲ್ಲಿ ಪಾಲುಗಾರರಾಗುತ್ತೇವೆ. ಅದೇ ರೀತಿಯಲ್ಲಿ, ಕ್ರಿಸ್ತನ ಮೂಲಕ ಹೇರಳವಾದ ಆದರಣೆಯು ನಮಗೆ ಬರುತ್ತದೆ. ನಮಗೆ ಸಂಕಷ್ಟಗಳಿರುವುದಾದರೆ, ಆ ಸಂಕಷ್ಟಗಳು ನಿಮ್ಮ ಆದರಣೆಗಾಗಿಯೇ ಮತ್ತು ರಕ್ಷಣೆಗಾಗಿಯೇ. ನಮಗೆ ಆದರಣೆ ಇರುವುದಾದರೆ, ಅದು ನಿಮ್ಮ ಆದರಣೆಗಾಗಿಯೇ. ನಮಗಿರುವಂಥ ಬಾಧೆಗಳನ್ನು ನೀವು ತಾಳ್ಮೆಯಿಂದ ಸ್ವೀಕರಿಸಿಕೊಳ್ಳಲು ಇದು ನಿಮಗೆ ಸಹಾಯವಾಗಿದೆ. ನಿಮ್ಮ ವಿಷಯದಲ್ಲಿ ನಮಗೆ ಬಲವಾದ ನಿರೀಕ್ಷೆಯಿದೆ. ನೀವು ನಮ್ಮ ಬಾಧೆಗಳಲ್ಲಿ ಪಾಲುಗಾರರಾಗಿರುವುದರಿಂದ ನಮ್ಮ ಆದರಣೆಯಲ್ಲಿಯೂ ನೀವು ಪಾಲುಗಾರರಾಗುತ್ತೀರಿ ಎಂಬುದು ನನಗೆ ತಿಳಿದಿದೆ.
ಸಹೋದರ ಸಹೋದರಿಯರೇ, ನಾವು ಏಷ್ಯಾ ಪ್ರಾಂತ್ಯದಲ್ಲಿ ಅನುಭವಿಸಿದ ಸಂಕಟದ ಬಗ್ಗೆ ನೀವು ತಿಳಿದುಕೊಳ್ಳಬೇಕೆಂದು ನಾವು ಅಪೇಕ್ಷಿಸುತ್ತೇವೆ. ಅಲ್ಲಿ ನಮಗೆ ಅಪಾರವಾದ ಭಾರಗಳಿದ್ದವು. ಆ ಭಾರಗಳು ನಮ್ಮ ಸ್ವಂತ ಶಕ್ತಿಗಿಂತಲೂ ಅಧಿಕವಾಗಿದ್ದವು. ಜೀವಸಹಿತ ಉಳಿಯುತ್ತೇವೆ ಎಂಬ ನಿರೀಕ್ಷೆಯನ್ನು ಸಹ ನಾವು ಬಿಟ್ಟುಕೊಟ್ಟೆವು. ನಿಜವಾಗಿಯೂ ನಾವು ಸಾಯುತ್ತೇವೆಂದು ನಮ್ಮ ಹೃದಯಗಳಲ್ಲಿ ನಂಬಿಕೊಂಡೆವು. ನಾವು ನಮ್ಮಲ್ಲಿ ಭರವಸೆ ಇಡದಂತೆಯೂ ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸುವ ದೇವರಲ್ಲಿ ಭರವಸೆ ಇಡಬೇಕೆಂತಲೂ ಇದಾಯಿತು. 10 ಮರಣದ ಈ ಮಹಾ ಅಪಾಯಗಳಿಂದ ದೇವರು ನಮ್ಮನ್ನು ರಕ್ಷಿಸಿದನು. ಮತ್ತು ಇನ್ನು ಮುಂದೆಯೂ ರಕ್ಷಿಸುವನು. ನಾವು ಆತನಲ್ಲಿ ಭರವಸೆ ಇಟ್ಟಿದ್ದೇವೆ. ಆತನು ನಮ್ಮನ್ನು ಇನ್ನು ಮುಂದೆಯೂ ರಕ್ಷಿಸುವನು. 11 ಇದಲ್ಲದೆ ನೀವು ನಿಮ್ಮ ಪ್ರಾರ್ಥನೆಗಳ ಮೂಲಕ ನಮಗೆ ಸಹಾಯ ಮಾಡಬಲ್ಲಿರಿ. ಆಗ, ನಿಮ್ಮ ಪ್ರಾರ್ಥನೆಗಳ ನಿಮಿತ್ತ ದೇವರು ನಮ್ಮನ್ನು ಆಶೀರ್ವದಿಸಿರುವುದನ್ನು ಕಂಡು ಅನೇಕರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು.
ಪೌಲನ ಯೋಜನೆಗಳಲ್ಲಿ ಬದಲಾವಣೆ
12 ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ. 13-14 ನೀವು ಓದಿ ಅರ್ಥಮಾಡಿಕೊಳ್ಳಬಲ್ಲ ಸಂಗತಿಗಳನ್ನು ಮಾತ್ರ ನಾನು ನಿಮಗೆ ಬರೆಯುತ್ತೇನೆ. ನಮ್ಮ ವಿಷಯವಾದ ಕೆಲವು ಸಂಗತಿಗಳನ್ನು ನೀವು ಈಗಾಗಲೇ ಸ್ಪಲ್ಪ ಅರ್ಥಮಾಡಿಕೊಂಡಂತೆ ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುತ್ತೀರೆಂಬ ನಿರೀಕ್ಷೆ ನನಗಿದೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಮತ್ತೆ ಬಂದಾಗ ನಾವು ನಿಮ್ಮ ವಿಷಯದಲ್ಲಿ ಹೆಮ್ಮೆಪಡುವಂತೆ ನೀವೂ ನಮ್ಮ ವಿಷಯದಲ್ಲಿ ಹೆಮ್ಮೆಪಡಲಾಗುವಂತೆ ನೀವು ಅರ್ಥಮಾಡಿಕೊಳ್ಳುತ್ತೀರಿ ಎಂಬ ಭರವಸೆ ನನಗಿದೆ.
15 ನಾನು ಈ ಎಲ್ಲಾ ವಿಷಯಗಳಲ್ಲಿ ಬಹು ಭರವಸೆ ಉಳ್ಳವನಾಗಿದ್ದೆನು. ಆದ್ದರಿಂದ ನಿಮ್ಮನ್ನು ಮೊದಲು ಸಂದರ್ಶಿಸಲು ನಾನು ಯೋಜನೆಗಳನ್ನು ಮಾಡಿದೆನು. ಆಗ ನಿಮಗೆ ಎರಡು ಸಲ ಆಶೀರ್ವಾದವಾಗಬಹುದಿತ್ತು. 16 ನಾನು ಮಕೆದೋನಿಯಕ್ಕೆ ಹೋಗುವಾಗಲೂ ಬಳಿಕ ಅಲ್ಲಿಂದ ಹಿಂತಿರುಗಿ ಬರುವಾಗಲೂ ನಿಮ್ಮ ಬಳಿಗೆ ಬರಬೇಕೆಂದಿದ್ದೆ. ಜುದೇಯಕ್ಕೆ ಪ್ರವಾಸ ಕೈಕೊಳ್ಳಲು ನಿಮ್ಮಿಂದ ಸಹಾಯವನ್ನು ಪಡೆದುಕೊಳ್ಳಬೇಕೆಂದಿದ್ದೆ. 17 ನಾನು ಆ ಯೋಜನೆಗಳನ್ನು ಮಾಡಿದಾಗ ನಿಮ್ಮ ಬಳಿಗೆ ಬರುವ ಉದ್ದೇಶ ನಿಜವಾಗಿಯೂ ನನಗಿರಲಿಲ್ಲವೆಂದು ಯೋಚಿಸುತ್ತೀರಾ? ನಾನು ಪ್ರಾಪಂಚಿಕರಂತೆ ಯೋಜನೆಗಳನ್ನು ಮಾಡಿದೆನೋ? ಅವರಾದರೋ ಯೋಜನೆಗಳನ್ನು ಮಾಡುವಾಗ “ಹೌದು, ಹೌದು” ಎಂತಲೂ ಅದೇ ಸಮಯದಲ್ಲಿ “ಇಲ್ಲ, ಇಲ್ಲ” ಎಂತಲೂ ಹೇಳುತ್ತಾರೆ.
18 ನೀವು ದೇವರನ್ನು ನಂಬಬಲ್ಲವರಾಗಿದ್ದರೆ, ನಾವು ನಿಮಗೆ ಏಕಕಾಲದಲ್ಲಿಯೇ “ಹೌದು” ಮತ್ತು “ಇಲ್ಲ” ಎಂದು ಹೇಳಲಿಲ್ಲವೆಂದು ನೀವು ನಂಬಬಲ್ಲಿರಿ. 19 ಸೀಲನು, ತಿಮೊಥೆಯನು ಮತ್ತು ನಾನು ನಿಮಗೆ ಬೋಧಿಸಿದ ದೇವರ ಮಗನಾದ ಯೇಸುಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಎರಡು ರೀತಿಯಲ್ಲಿರಲಿಲ್ಲ. ಕ್ರಿಸ್ತನಲ್ಲಿ ಯಾವಾಗಲೂ ಇರುವಂಥದ್ದು “ಹೌದು” ಎಂಬುದೇ. 20 ದೇವರು ಮಾಡಿದ ವಾಗ್ದಾನಗಳಿಗೆಲ್ಲ “ಹೌದು” ಎಂಬ ಉತ್ತರ ಕ್ರಿಸ್ತನೇ ಆಗಿದ್ದಾನೆ. ಆದ್ದರಿಂದಲೇ ನಾವು ದೇವರ ಮಹಿಮೆಗಾಗಿ ಕ್ರಿಸ್ತನ ಮೂಲಕ “ಆಮೆನ್” ಎಂದು ಹೇಳುತ್ತೇವೆ. 21 ನಿಮ್ಮನ್ನು ಮತ್ತು ನಮ್ಮನ್ನು ಕ್ರಿಸ್ತನಲ್ಲಿ ದೃಢಗೊಳಿಸುವಾತನು ದೇವರೇ. ದೇವರು ತನ್ನ ವಿಶೇಷವಾದ ಆಶೀರ್ವಾದವನ್ನು ನಮಗೆ ಕೊಟ್ಟಿದ್ದಾನೆ. 22 ನಾವು ಆತನವರೆಂಬುದನ್ನು ತೋರಿಸುವುದಕ್ಕಾಗಿ ಆತನು ನಮ್ಮ ಮೇಲೆ ಮುದ್ರೆಯನ್ನು ಹಾಕಿದ್ದಾನೆ. ಆತನು ತನ್ನ ಪವಿತ್ರಾತ್ಮನನ್ನು ನಮ್ಮ ಹೃದಯಗಳಲ್ಲಿ ನೆಲೆಗೊಳಿಸಿದ್ದಾನೆ. ಆತನು ನಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುತ್ತಾನೆ ಎಂಬುದಕ್ಕೆ ಪವಿತ್ರಾತ್ಮನೇ ನಮಗೆ ಆಧಾರವಾಗಿದ್ದಾನೆ.
23 ನಿಮ್ಮನ್ನು ಶಿಕ್ಷಿಸುವುದಕ್ಕಾಗಲಿ ನೋಯಿಸುವುದಕ್ಕಾಗಲಿ ನನಗೆ ಇಷ್ಟವಿರಲಿಲ್ಲ. ಆದಕಾರಣ ನಾನು ನಿಮ್ಮ ಬಳಿಗೆ ಹಿಂತಿರುಗಿ ಬರಲಿಲ್ಲ. ಇದು ಸತ್ಯ. ಇದಕ್ಕೆ ದೇವರೇ ಸಾಕ್ಷಿ. 24 ನಿಮ್ಮ ನಂಬಿಕೆಯನ್ನು ಹತೋಟಿಯಲ್ಲಿಟ್ಟುಕೊಳ್ಳಲು ನಾವು ಪ್ರಯತ್ನಿಸುತ್ತಿದ್ದೇವೆಂದು ನಾನು ಹೇಳುತ್ತಿಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿದ್ದೀರಿ. ಆದರೆ ನಾವು ನಿಮ್ಮ ಸಂತೋಷಕ್ಕಾಗಿ ನಿಮ್ಮ ಜೊತೆಕೆಲಸದವರಾಗಿದ್ದೇವೆ.