12
ಫರಿಸಾಯರಂತಾಗಬೇಡಿ
ಸಾವಿರಾರು ಜನರು ಒಬ್ಬರನ್ನೊಬ್ಬರು ನೂಕುತ್ತಾ ಕಿಕ್ಕಿರಿದು ನೆರೆದಿದ್ದರು. ಜನರಿಗೆ ಉಪದೇಶಿಸುವ ಮೊದಲು ಯೇಸು ತನ್ನ ಶಿಷ್ಯರಿಗೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ ಅವರ ಕಪಟತನದ ಬಗ್ಗೆ ಎಚ್ಚರಿಕೆಯಾಗಿರಿ. ಮರೆಯಾದ ಪ್ರತಿಯೊಂದೂ ಬಯಲಾಗುವುದು. ಗುಪ್ತವಾಗಿರುವ ಪ್ರತಿಯೊಂದೂ ಪ್ರಕಟಿಸಲ್ಪಡುವುದು. ಕತ್ತಲಿನಲ್ಲಿ (ಗುಪ್ತವಾಗಿ) ನೀವು ಹೇಳುವ ವಿಷಯಗಳು ಬೆಳಕಿನಲ್ಲಿ (ಬಹಿರಂಗವಾಗಿ) ತಿಳಿಸಲ್ಪಡುವವು. ಗುಪ್ತವಾಗಿ ಕೋಣೆಯಲ್ಲಿ ನೀವು ಪಿಸುಗುಟ್ಟುವ ವಿಷಯಗಳು, ಮನೆಯ ಮೇಲಿನಿಂದ ಗಟ್ಟಿಯಾಗಿ ಪ್ರಕಟಿಸಲ್ಪಡುವವು” ಎಂದು ಹೇಳಿದನು.
ದೇವರಿಗೆ ಮಾತ್ರ ಭಯಪಡಿರಿ
(ಮತ್ತಾಯ 10:28-31)
ಬಳಿಕ ಯೇಸು ಜನರಿಗೆ ಹೀಗೆಂದನು: “ಗೆಳೆಯರೇ, ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರಿಗೆ ಭಯಪಡಬೇಡಿ. ಅವರು ನಿಮ್ಮನ್ನು ಕೊಲ್ಲಬಹುದಷ್ಟೇ. ಆ ಬಳಿಕ ಬೇರೇನೂ ಮಾಡಲು ಅವರಿಂದಾಗದು. ನೀವು ಯಾರಿಗೆ ಭಯಪಡಬೇಕೆಂದರೆ, ನಿಮ್ಮನ್ನು ಕೊಂದು ನರಕಕ್ಕೆ ಹಾಕಲು ಅಧಿಕಾರವುಳ್ಳಾತನಿಗಷ್ಟೇ (ದೇವರಿಗೆ). ಹೌದು, ಆತನೊಬ್ಬನಿಗೇ ನೀವು ಭಯಪಡಬೇಕು.
“ಐದು ಗುಬ್ಬಿಗಳ ಬೆಲೆ ಕೇವಲ ಎರಡು ಪೈಸೆಗಳು. ಆದರೆ ದೇವರು ಅವುಗಳಲ್ಲಿ ಒಂದನ್ನೂ ಮರೆತುಬಿಡುವುದಿಲ್ಲ. ಹೌದು, ನಿಮ್ಮ ತಲೆಯಲ್ಲಿ ಎಷ್ಟು ಕೂದಲುಗಳಿವೆ ಎಂಬುದು ಸಹ ದೇವರಿಗೆ ಗೊತ್ತಿದೆ. ಹೆದರಬೇಡಿರಿ. ನೀವು ಅನೇಕ ಗುಬ್ಬಿಗಳಿಗಿಂತ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.
ಯೇಸುವಿನ ಕುರಿತು ನಾಚಿಕೆಪಡಬೇಡಿರಿ
(ಮತ್ತಾಯ 10:32-33; 12:32; 10:19-20)
“ನಾನು ನಿಮಗೆ ಹೇಳುವುದೇನೆಂದರೆ, ಯಾವನಾದರೂ ಬೇರೆಯವರ ಎದುರಿನಲ್ಲಿ ತಾನು ನನ್ನವನೆಂದು ಹೇಳಿದರೆ, ನಾನು ಸಹ* ನಾನು ಅಕ್ಷರಶಃ, “ಮನುಷ್ಯಕುಮಾರನು” (ಯೇಸು). ಅವನನ್ನು ನನ್ನವನೆಂದು ದೇವದೂತರ ಮುಂದೆ ಹೇಳುವೆನು. ಆದರೆ ಯಾವನಾದರೂ ಬೇರೆಯವರ ಎದುರಿನಲ್ಲಿ ತಾನು ನನ್ನವನಲ್ಲವೆಂದು ಹೇಳಿದರೆ, ನಾನು ಸಹ ದೇವದೂತರ ಮುಂದೆ ಅವನನ್ನು ನನ್ನವನಲ್ಲವೆಂದು ಹೇಳುವೆನು.
10 “ಯಾವನಾದರೂ ಮನುಷ್ಯಕುಮಾರನಿಗೆ ವಿರೋಧವಾಗಿ ಮಾತಾಡಿದರೆ ಅವನಿಗೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಕ್ಷಮೆಯೇ ಇಲ್ಲ.
11 “ಜನರು ನಿಮ್ಮನ್ನು ಸಭಾಮಂದಿರಗಳಿಗೂ ನ್ಯಾಯಾಧಿಪತಿಗಳ ಮತ್ತು ದೇಶಾಧಿಕಾರಿಗಳ ಬಳಿಗೂ ಎಳೆದೊಯ್ಯುವಾಗ ಅವರಿಗೆ ಏನು ಹೇಳಬೇಕೆಂದು ಚಿಂತೆ ಮಾಡಬೇಡಿ. 12 ಆ ಸಮಯದಲ್ಲಿ ನೀವು ಹೇಳಬೇಕಾದುದನ್ನು ಪವಿತ್ರಾತ್ಮನೇ ನಿಮಗೆ ತಿಳಿಸುವನು.”
ಸ್ವಾರ್ಥತೆಯ ಬಗ್ಗೆ ಯೇಸುವಿನ ಎಚ್ಚರಿಕೆ
13 ಸಮೀಪದಲ್ಲಿದ್ದ ಒಬ್ಬನು ಯೇಸುವಿಗೆ, “ಬೋಧಕನೇ, ನಮ್ಮ ತಂದೆ ಇದೀಗ ಸತ್ತುಹೋದನು. ನಮ್ಮ ತಂದೆಯ ಆಸ್ತಿಯಲ್ಲಿ ನನಗೆ ಪಾಲುಕೊಡಬೇಕೆಂದು ನನ್ನ ಅಣ್ಣನಿಗೆ ಹೇಳು” ಎಂದು ಹೇಳಿದನು.
14 ಆದರೆ ಯೇಸು ಅವನಿಗೆ, “ನಾನು ನಿಮ್ಮ ನ್ಯಾಯಾಧಿಪತಿ ಎಂದಾಗಲಿ ನಿಮ್ಮ ತಂದೆಯ ಆಸ್ತಿಯನ್ನು ನಿಮ್ಮಿಬ್ಬರಿಗೆ ಹಂಚಿಕೊಡುವವನು ಎಂದಾಗಲಿ ನಿನಗೆ ಯಾರು ಹೇಳಿದರು?” ಎಂದು ಕೇಳಿದನು. 15 ಬಳಿಕ ಯೇಸು ನೆರೆದಿದ್ದ ಜನರಿಗೆ, “ಎಚ್ಚರಿಕೆ, ಯಾವ ವಿಧವಾದ ಸ್ವಾರ್ಥಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಒಬ್ಬನಿಗೆ ಎಷ್ಟೇ ಆಸ್ತಿಯಿದ್ದರೂ ಅದರಿಂದ ಅವನು ಜೀವವನ್ನು ಪಡೆದುಕೊಳ್ಳಲಾರನು” ಎಂದನು.
16 ಬಳಿಕ ಯೇಸು ಈ ಸಾಮ್ಯವನ್ನು ಹೇಳಿದನು: “ಒಬ್ಬ ಐಶ್ವರ್ಯವಂತನಿದ್ದನು. ಅವನಿಗೆ ಬಹಳ ಜಮೀನಿತ್ತು. ಒಮ್ಮೆ ಅವನ ಜಮೀನಿನಲ್ಲಿ ಸಮೃದ್ಧಿಯಾದ ಬೆಳೆ ಆಯಿತು. 17 ಆಗ ಐಶ್ವರ್ಯವಂತನು, ‘ನಾನೇನು ಮಾಡಲಿ? ನನ್ನ ಬೆಳೆಯನ್ನೆಲ್ಲಾ ತುಂಬಿಡಲು ನನಗೆ ಸ್ಥಳವಿಲ್ಲವಲ್ಲಾ!’ ಎಂದುಕೊಂಡನು.
18 “ಬಳಿಕ ಅವನು, ‘ನಾನೇನು ಮಾಡಬೇಕೆಂಬುದು ನನಗೆ ತಿಳಿದದೆ. ನನ್ನ ಕಣಜಗಳನ್ನು ಕೆಡವಿ, ದೊಡ್ಡ ಕಣಜಗಳನ್ನು ಕಟ್ಟುವೆನು! ನನ್ನ ಹೊಸ ಕಣಜಗಳಲ್ಲಿ ಗೋಧಿಯನ್ನೂ ಒಳ್ಳೆಯ ಪದಾರ್ಥಗಳನ್ನೂ ತುಂಬಿಸಿಡುವೆನು.’ 19 ಆ ಬಳಿಕ ನಾನು ‘ನನಗೆ ಅನೇಕ ವರ್ಷಗಳವರೆಗೆ ಬೇಕಾದಷ್ಟು ಸರಕನ್ನು ಕೂಡಿಸಿಟ್ಟಿದ್ದೇನೆ. ವಿಶ್ರಮಿಸಿಕೊ, ತಿನ್ನು, ಕುಡಿ, ಸಂತೋಷಪಡು! ಎಂದು ಹೇಳಿಕೊಳ್ಳುವೆನು’ ಎಂಬುದಾಗಿ ಆಲೋಚಿಸಿಕೊಂಡನು.
20 “ಆದರೆ ದೇವರು ಅವನಿಗೆ, ‘ನೀನು ಬುದ್ಧಿಹೀನ! ಈ ರಾತ್ರಿ ನೀನು ಸಾಯುವೆ! ಈಗ ಹೇಳು, ನೀನು ಕೂಡಿಟ್ಟ ಪದಾರ್ಥಗಳ ಗತಿ ಏನಾಗುವುದು? ಅವು ಯಾರ ಪಾಲಾಗುತ್ತವೆ?’ ಎಂದು ಕೇಳಿದನು.
21 “ತನಗೋಸ್ಕರ ಮಾತ್ರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳುವವನ ಗತಿ ಇದೇ. ದೇವರ ದೃಷ್ಟಿಯಲ್ಲಿ ಅವನು ಐಶ್ವರ್ಯವಂತನಲ್ಲ.”
ದೇವರ ರಾಜ್ಯಕ್ಕೆ ಮೊದಲನೆ ಪ್ರಾಧಾನ್ಯತೆ
(ಮತ್ತಾಯ 6:25-34; 19-21)
22 ಯೇಸು ತನ್ನ ಶಿಷ್ಯರಿಗೆ ಹೀಗೆ ಹೇಳಿದನು: “ಈ ಕಾರಣದಿಂದ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಪ್ರಾಣಧಾರಣೆಗೆ ಬೇಕಾದ ಊಟಕ್ಕಾಗಿ ಮತ್ತು ತೊಟ್ಟುಕೊಳ್ಳಲು ಬೇಕಾದ ಬಟ್ಟೆಗಾಗಿ ಚಿಂತಿಸಬೇಡಿರಿ. 23 ಆಹಾರಕ್ಕಿಂತ ಪ್ರಾಣ ಹೆಚ್ಚು ಪ್ರಾಮುಖ್ಯವಾದದ್ದು. ಬಟ್ಟೆಗಿಂತಲೂ ದೇಹ ಹೆಚ್ಚು ಪ್ರಾಮುಖ್ಯವಾದದ್ದು. 24 ಪಕ್ಷಿಗಳನ್ನು ನೋಡಿರಿ. ಅವು ಬಿತ್ತುವುದೂ ಇಲ್ಲ, ಕೊಯ್ಯುವುದೂ ಇಲ್ಲ. ಅವು ಆಹಾರವನ್ನು ಮನೆಗಳಲ್ಲಾಗಲಿ ಕಣಜಗಳಲ್ಲಾಗಲಿ ತುಂಬಿಟ್ಟುಕೊಳ್ಳುವುದಿಲ್ಲ. ದೇವರೇ ಅವುಗಳನ್ನು ಪರಿಪಾಲಿಸುತ್ತಾನೆ. ನೀವು ಪಕ್ಷಿಗಳಿಗಿಂತ ಎಷ್ಟೋ ಅಮೂಲ್ಯರಾಗಿದ್ದೀರಿ. 25 ನೀವು ಊಟಬಟ್ಟೆಗಳಿಗಾಗಿ ಎಷ್ಟೇ ಚಿಂತಿಸಿದರೂ ನಿಮ್ಮ ಆಯುಷ್ಯೇನೂ ಹೆಚ್ಚಾಗುವುದಿಲ್ಲ. 26 ಚಿಕ್ಕಕಾರ್ಯಗಳನ್ನೇ ಮಾಡಲು ನಿಮಗೆ ಸಾಧ್ಯವಿಲ್ಲದಿರುವಾಗ, ದೊಡ್ಡಕಾರ್ಯಗಳ ಕುರಿತು ನೀವು ಚಿಂತಿಸುವುದೇಕೆ?
27 “ಅಡವಿಯ ಹೂವುಗಳು ಬೆಳೆಯುವ ಬಗೆಯನ್ನು ನೋಡಿರಿ. ಅವು ದುಡಿಯುವುದಿಲ್ಲ. ತಮಗಾಗಿ ಉಡುಪುಗಳನ್ನು ಹೊಲಿದುಕೊಳ್ಳುವುದಿಲ್ಲ. ಆದರೂ ಸೊಲೊಮೋನ ರಾಜನು ತನ್ನ ಸಕಲ ವೈಭವದಲ್ಲಿ ಇದ್ದಾಗಲೂ ಈ ಹೂವುಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ. 28 ದೇವರು ಬಯಲಿನ ಹುಲ್ಲಿಗೂ ಹೀಗೆ ಉಡಿಸುತ್ತಾನೆ. ಹುಲ್ಲಾದರೋ ಈ ಹೊತ್ತಿದ್ದು ನಾಳೆ ಬೆಂಕಿಯ ಪಾಲಾಗುವುದು. ಹೀಗಿರಲು ದೇವರು ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವುದಿಲ್ಲವೇ? ಆದ್ದರಿಂದ ಅಲ್ಪವಿಶ್ವಾಸಿಗಳಾಗಿರಬೇಡಿ!
29 “ಏನು ಊಟಮಾಡಬೇಕು? ಏನು ಕುಡಿಯಬೇಕು? ಎಂದು ಯಾವಾಗಲೂ ಆಲೋಚಿಸಬೇಡಿರಿ ಮತ್ತು ಚಿಂತಿಸಬೇಡಿರಿ. 30 ಅವುಗಳನ್ನು ಪಡೆದುಕೊಳ್ಳುವುದಕ್ಕಾಗಿ ಲೋಕದ ಜನರೆಲ್ಲರೂ ಪ್ರಯತ್ನಿಸುತ್ತಾರೆ. ಅವುಗಳ ಅವಶ್ಯಕತೆ ನಿಮಗೂ ಇದೆ ಎಂಬುದು ನಿಮ್ಮ ತಂದೆಗೆ (ದೇವರು) ತಿಳಿದಿದೆ. 31 ನೀವು ದೇವರ ರಾಜ್ಯಕ್ಕೆ ಮೊದಲನೆ ಪ್ರಾಧಾನ್ಯತೆಯನ್ನು ಕೊಡಿರಿ. ಆಗ ನಿಮಗೆ ಬೇಕಾಗಿರುವ ಉಳಿದವುಗಳನ್ನು ಕೊಡಲಾಗುವುದು.
ಹಣದಲ್ಲಿ ಭರವಸೆ ಇಡಬೇಡಿ
32 “ಚಿಕ್ಕ ಮಂದೆಯೇ, ಹೆದರಬೇಡ, ನಿಮಗೆ ರಾಜ್ಯವನ್ನು ಕೊಡಲು ನಿಮ್ಮ ತಂದೆ ಬಯಸಿದ್ದಾನೆ. 33 ನಿಮ್ಮಲ್ಲಿರುವ ಆಸ್ತಿಯನ್ನು ಮಾರಿ, ಬಂದ ಹಣವನ್ನು ಕೊರತೆಯಲ್ಲಿರುವ ಜನರಿಗೆ ಕೊಡಿರಿ. ಈ ಲೋಕದ ಐಶ್ವರ್ಯ ಶಾಶ್ವತವಲ್ಲ. ಆದ್ದರಿಂದ ಶಾಶ್ವತವಾದ ಐಶ್ವರ್ಯವನ್ನು ಗಳಿಸಿಕೊಳ್ಳಿರಿ. ಲಯವಾಗದ ಸಂಪತ್ತನ್ನು ಪರಲೋಕದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಆ ಭಂಡಾರವನ್ನು ಕಳ್ಳರು ಕದಿಯಲಾಗುವುದಿಲ್ಲ ಮತ್ತು ಹುಳಗಳು ನಾಶಮಾಡಲಾಗುವುದಿಲ್ಲ. 34 ನಿಮ್ಮ ಭಂಡಾರ ಎಲ್ಲಿದೆಯೋ ಅಲ್ಲಿಯೇ ನಿಮ್ಮ ಹೃದಯವೂ ಇರುತ್ತದೆ.
ಯಾವಾಗಲೂ ಸಿದ್ಧವಾಗಿರಿ
(ಮತ್ತಾಯ 24:42-44)
35 “ಉಡುಪನ್ನು ಧರಿಸಿಕೊಂಡು ಪೂರ್ಣಸಿದ್ಧರಾಗಿರಿ! ನಿಮ್ಮ ದೀಪಗಳು ಉರಿಯುತ್ತಿರಲಿ. 36 ಮದುವೆಯ ಔತಣದಿಂದ ಮನೆಗೆ ಮರಳಿಬರುವ ಯಜಮಾನನನ್ನು ಎದುರುನೋಡುತ್ತಿರುವ ಸೇವಕರಂತಿರಿ. ಯಜಮಾನನು ಬಂದು ಬಾಗಿಲನ್ನು ತಟ್ಟಿದಾಗ ಸೇವಕರು ಬಾಗಿಲನ್ನು ತೆರೆಯುತ್ತಾರೆ. 37 ಆ ಸೇವಕರೇ ಧನ್ಯರು. ಏಕೆಂದರೆ, ಅವರು ಸಿದ್ಧರಾಗಿದ್ದು ತನಗೋಸ್ಕರ ಕಾಯುತ್ತಿದ್ದುದನ್ನು ಯಜಮಾನನು ನೋಡುತ್ತಾನೆ. ನಾನು ನಿಮಗೆ ಸತ್ಯವಾಗಿ ಹೇಳುವುದೇನೆಂದರೆ, ಆಗ ಯಜಮಾನನು ತಾನೇ ಸೇವಕರ ಉಡುಪನ್ನು ಧರಿಸಿಕೊಂಡು, ಆ ಸೇವಕರನ್ನು ಕುಳ್ಳಿರಿಸಿ, ಅವರಿಗೆ ಊಟ ಬಡಿಸುತ್ತಾನೆ. 38 ಆ ಆಳುಗಳು ತಮ್ಮ ಯಜಮಾನನಿಗಾಗಿ ಮಧ್ಯರಾತ್ರಿಯವರೆಗೆ ಅಥವಾ ಇನ್ನೂ ಹೆಚ್ಚು ಸಮಯದವರೆಗೆ ಎಚ್ಚರದಿಂದ ಇರಬೇಕಾಗಬಹುದು. ಆದರೆ ಯಜಮಾನನು ಬಂದು, ಇನ್ನೂ ಎಚ್ಚರದಿಂದಿರುವ ಅವರನ್ನು ಕಂಡಾಗ ಅವರಿಗೆ ಸಂತೋಷವಾಗುವುದು.
39 “ಇದು ನಿಮ್ಮ ನೆನಪಿನಲ್ಲಿರಲಿ: ಕಳ್ಳನು ಬರುವ ಗಳಿಗೆಯು ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ! 40 ಅಂತೆಯೇ, ನೀವೂ ಸಿದ್ಧರಾಗಿರಿ! ನೀವು ನಿರೀಕ್ಷಿಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುವನು!”
ನಂಬಿಗಸ್ತನಾದ ಆಳು ಯಾರು?
41 ಪೇತ್ರನು, “ಪ್ರಭುವೇ, ನೀನು ಈ ಸಾಮ್ಯವನ್ನು ಹೇಳಿದ್ದು ನಮಗಾಗಿಯೋ ಅಥವಾ ಎಲ್ಲಾ ಜನರಿಗಾಗಿಯೋ?” ಎಂದು ಕೇಳಿದನು.
42 ಪ್ರಭುವು ಹೀಗೆಂದನು: “ವಿವೇಕಿಯೂ ನಂಬಿಗಸ್ತನೂ ಆದ ಆಳು ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಿಸಲ್ಪಟ್ಟವನೇ. 43 ಆ ಸೇವಕನು ತನ್ನ ಕರ್ತವ್ಯವನ್ನು ನಿಷ್ಠೆಯಿಂದ ಮಾಡುತ್ತಿದ್ದರೆ, ಯಜಮಾನನು ಬಂದಾಗ ಅವನಿಗೆ ಬಹಳ ಸಂತೋಷವಾಗುವುದು. 44 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಯಜಮಾನನು ಆ ಸೇವಕನನ್ನು ತನ್ನ ಆಸ್ತಿಗೆಲ್ಲಾ ಮೇಲ್ವಿಚಾರಕನನ್ನಾಗಿ ನೇಮಿಸುವನು.
45 “ಆದರೆ ಆ ಸೇವಕನು ದುಷ್ಟನಾಗಿ ತನ್ನ ಯಜಮಾನನು ಬೇಗನೆ ಹಿಂತಿರುಗಿ ಬರುವುದಿಲ್ಲ ಎಂದುಕೊಂಡರೆ ಏನಾಗುವುದು? ಆ ಸೇವಕನು ಯಜಮಾನನ ಇತರ ದಾಸದಾಸಿಯರನ್ನು ಹೊಡೆಯುವುದಕ್ಕೂ ತಿಂದುಕುಡಿದು ಮತ್ತನಾಗುವುದಕ್ಕೂ ತೊಡಗುವನು. 46 ಬಳಿಕ ಅವನು ನಿರೀಕ್ಷಿಸಿಲ್ಲದ ಗಳಿಗೆಯಲ್ಲಿ ಯಜಮಾನನು ಬಂದು ಅವನನ್ನು ದಂಡಿಸಿ ಅಪನಂಬಿಗಸ್ತರಿರುವ ಸ್ಥಳಕ್ಕೆ ದಬ್ಬುವನು.
47 “ತನ್ನ ಯಜಮಾನನು ತನ್ನಿಂದ ಏನು ಅಪೇಕ್ಷಿಸುತ್ತಾನೆ ಎಂಬುದು ಆ ಸೇವಕನಿಗೆ ಗೊತ್ತಿತ್ತು. ಆದರೆ ಅವನು ತನ್ನನ್ನು ಸಿದ್ಧಪಡಿಸಿಕೊಳ್ಳಲಿಲ್ಲ ಮತ್ತು ತನ್ನ ಕೆಲಸವನ್ನು ಪೂರೈಸಲು ಪ್ರಯತ್ನಿಸಲಿಲ್ಲ. ಆದ್ದರಿಂದ ಅವನು ಕಠಿಣ ದಂಡನೆಗೆ ಗುರಿಯಾಗುವನು! 48 ಆದರೆ ತನ್ನ ಯಜಮಾನನ ಬಯಕೆಯನ್ನು ತಿಳಿದಿಲ್ಲದ ಸೇವಕನಿಗೆ ಏನಾಗುವುದು? ಇವನು ಸಹ ದಂಡನೆಗೆ ಅರ್ಹವಾದ ಕಾರ್ಯಗಳನ್ನು ಮಾಡುತ್ತಾನೆ. ಆದರೆ ತನ್ನ ಕರ್ತವ್ಯವನ್ನು ತಿಳಿದಿದ್ದರೂ ಮಾಡದೆಹೋದ ಸೇವಕನಿಗಿಂತ ಇವನಿಗೆ ಕಡಿಮೆ ದಂಡನೆ ಆಗುವುದು. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ಪಡೆದವನಿಂದ ಇನ್ನೂ ಹೆಚ್ಚಾಗಿ ನಿರೀಕ್ಷಿಸಲಾಗುವುದು.”
ಯೇಸುವಿನ ಬಗ್ಗೆ ಭಿನ್ನಾಭಿಪ್ರಾಯ
(ಮತ್ತಾಯ 10:34-36)
49 ಯೇಸು ತನ್ನ ಮಾತನ್ನು ಮುಂದುವರೆಸಿ ಹೀಗೆಂದನು: “ನಾನು ಈ ಲೋಕಕ್ಕೆ ಬೆಂಕಿಹಾಕಲು ಬಂದೆನು! ಅದು ಇಷ್ಟರೊಳಗೆ ಉರಿಯುತ್ತಿದ್ದರೆ ನನಗೆ ಸಂತೋಷ! 50 ನಾನು ಬೇರೊಂದು ರೀತಿಯ ದೀಕ್ಷಾಸ್ನಾನ ಹೊಂದಬೇಕು. ಅದನ್ನು ಹೊಂದುವ ತನಕ ನಾನು ಬಹಳ ತೊಂದರೆಯಲ್ಲಿದ್ದೇನೆ. 51 ನಾನು ಲೋಕಕ್ಕೆ ಸಮಾಧಾನವನ್ನು ಕೊಡುವುದಕ್ಕೆ ಬಂದೆನೆಂದು ನೀವು ಭಾವಿಸುತ್ತೀರೋ? ಇಲ್ಲ! ನಾನು ಲೋಕದಲ್ಲಿ ಭೇದವನ್ನು ಉಂಟುಮಾಡಲು ಬಂದೆನು! 52 ಇಂದಿನಿಂದ, ಐದು ಜನರಿರುವ ಕುಟುಂಬದಲ್ಲಿ ಭೇದ ಉಂಟಾಗುವುದು. ಅವರಲ್ಲಿ ಮೂವರು ಇಬ್ಬರಿಗೆ ವಿರೋಧವಾಗುವರು ಮತ್ತು ಇಬ್ಬರು ಮೂವರಿಗೆ ವಿರೋಧವಾಗುವರು.
 
53 ತಂದೆಗೂ ಮಗನಿಗೂ ಭೇದ ಉಂಟಾಗುವುದು.
ಮಗನು ತನ್ನ ತಂದೆಗೆ ವಿರೋಧವಾಗುವನು.
ತಂದೆಯು ತನ್ನ ಮಗನಿಗೆ ವಿರೋಧವಾಗುವನು,
ತಾಯಿಗೂ ಮಗಳಿಗೂ ಭೇದ ಉಂಟಾಗುವುದು.
ಮಗಳು ತನ್ನ ತಾಯಿಗೆ ವಿರೋಧವಾಗುವಳು,
ತಾಯಿ ತನ್ನ ಮಗಳಿಗೆ ವಿರೋಧವಾಗುವಳು.
ಅತ್ತೆಗೂ ಸೊಸೆಗೂ ಭೇದವಿರುವುದು.
ಸೊಸೆಯು ತನ್ನ ಅತ್ತೆಗೆ ವಿರೋಧವಾಗುವಳು,
ಅತ್ತೆಯು ತನ್ನ ಸೊಸೆಗೆ ವಿರೋಧವಾಗುವಳು.”
ಕಾಲಮಾನವನ್ನು ಗ್ರಹಿಸಿಕೊಳ್ಳಿರಿ
(ಮತ್ತಾಯ 16:2-3)
54 ಬಳಿಕ ಯೇಸು ಜನರಿಗೆ ಹೀಗೆಂದನು: “ಮೋಡವು ಪಶ್ಚಿಮ ದಿಕ್ಕಿನಲ್ಲಿ ದೊಡ್ಡದಾಗುತ್ತಿರುವುದನ್ನು ನೀವು ನೋಡುವಾಗ ‘ಇಂದು ಮಳೆ ಬರುತ್ತದೆ’ ಎಂದು ಹೇಳುತ್ತೀರಿ. ಅಂತೆಯೇ ಅಂದು ಮಳೆಯಾಗುತ್ತದೆ. 55 ದಕ್ಷಿಣ ದಿಕ್ಕಿನಿಂದ ಗಾಳಿ ಬೀಸತೊಡಗಿದಾಗ, ‘ಈ ದಿನ ತುಂಬಾ ಸೆಕೆ ಇರುವುದು’ ಎನ್ನುತ್ತೀರಿ. ಅಂತೆಯೇ ಸೆಕೆ ಇರುವುದು. 56 ನೀವು ಕಪಟಿಗಳು! ಹವಾಮಾನವನ್ನು ತಿಳಿದುಕೊಳ್ಳಬಲ್ಲ ನೀವು ಈಗ ನಡೆಯುತ್ತಿರುವುದನ್ನು ಗ್ರಹಿಸಿಕೊಳ್ಳಲು ಸಾಧ್ಯವಿಲ್ಲವೇ?
ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿರಿ
(ಮತ್ತಾಯ 5:25-26)
57 “ನೀವೇ ನ್ಯಾಯನಿರ್ಣಯವನ್ನು ಮಾಡಬಾರದೇಕೆ? 58 ಒಬ್ಬನು ನಿಮ್ಮ ಮೇಲೆ ದಾವೆ ಹೂಡಲು ನ್ಯಾಯಾಲಯಕ್ಕೆ ಹೋಗುತ್ತಿರುವಾಗ ನಿಮ್ಮ ಸಮಸ್ಯೆಯನ್ನು ದಾರಿಯಲ್ಲಿಯೇ ಪರಿಹರಿಸಲು ನಿಮ್ಮಿಂದಾದಷ್ಟು ಪ್ರಯತ್ನಿಸಿರಿ. ಇಲ್ಲವಾದರೆ, ಅವನು ನಿಮ್ಮನ್ನು ನ್ಯಾಯಾಧೀಶನ ಬಳಿಗೆ ಕೊಂಡೊಯ್ಯುವನು. ನ್ಯಾಯಾಧೀಶನು ನಿಮ್ಮನ್ನು ಸೆರೆಮನೆಗೆ ಹಾಕಿಸುವನು. 59 ನೀವು ನಿಮ್ಮ ಸಾಲವನ್ನೆಲ್ಲಾ ಕೊನೆಯ ಪೈಸದವರೆಗೆ ತೀರಿಸುವ ತನಕ ಸೆರೆಮನೆಯಿಂದ ಹೊರಗೆ ಬರಲು ಸಾಧ್ಯವೇ ಇಲ್ಲ!”

*12:8: ನಾನು ಅಕ್ಷರಶಃ, “ಮನುಷ್ಯಕುಮಾರನು” (ಯೇಸು).