21
ನಿಜವಾದ ಕಾಣಿಕೆ
(ಮಾರ್ಕ 12:41-44)
ಕೆಲವು ಐಶ್ವರ್ಯವಂತರು ದೇವಾಲಯದ ಹಣದ ಪೆಟ್ಟಿಗೆಯಲ್ಲಿ ದೇವರಿಗಾಗಿ ತಮ್ಮ ಕಾಣಿಕೆಗಳನ್ನು ಹಾಕುವುದನ್ನು ಯೇಸು ಗಮನಿಸಿದನು. ಅಷ್ಟರಲ್ಲಿ ಒಬ್ಬ ಬಡ ವಿಧವೆಯು ಬಂದು ಎರಡು ಚಿಕ್ಕನಾಣ್ಯಗಳನ್ನು ಪೆಟ್ಟಿಗೆಯಲ್ಲಿ* ಹಣದ ಪೆಟ್ಟಿಗೆ ಜನರು ತಮ್ಮ ಕಾಣಿಕೆಗಳನ್ನು ದೇವರಿಗೆ ಸಮರ್ಪಿಸುವುದಕ್ಕೆ ಯೆಹೂದ್ಯರ ಆರಾಧನೆಯ ಸ್ಥಳದಲ್ಲಿ ಇಡಲ್ಪಟ್ಟ ವಿಶೇಷ ಪೆಟ್ಟಿಗೆ. ಹಾಕಿದಳು. ಅದನ್ನು ಕಂಡ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ. ಈ ಬಡ ವಿಧವೆ ಕೇವಲ ಎರಡು ಚಿಕ್ಕ ತಾಮ್ರದ ನಾಣ್ಯಗಳನ್ನು ಕೊಟ್ಟಳು. ಆದರೆ ಆಕೆ ನಿಜವಾಗಿಯೂ, ಆ ಐಶ್ವರ್ಯವಂತರೆಲ್ಲರಿಗಿಂತ ಹೆಚ್ಚು ಕೊಟ್ಟಳು. ಐಶ್ವರ್ಯವಂತರಿಗೆ ಬೇಕಾದಷ್ಟು ಇದೆ. ಅವರು ಕೇವಲ ತಮಗೆ ಅವಶ್ಯವಿಲ್ಲದ್ದನ್ನು ಕೊಟ್ಟರು. ಈ ಸ್ತ್ರೀ ಬಹಳ ಬಡವಳಾಗಿದ್ದರೂ ತನ್ನಲ್ಲಿ ಇದ್ದದ್ದೆಲ್ಲವನ್ನೂ ಕೊಟ್ಟಳು. ಈಕೆಗೆ ಆ ಹಣದ ಅವಶ್ಯವಿತ್ತು” ಎಂದು ಹೇಳಿದನು.
ದೇವಾಲಯದ ನಾಶನ
(ಮತ್ತಾಯ 24:1-14; ಮಾರ್ಕ 13:1-13)
ಶಿಷ್ಯರಲ್ಲಿ ಕೆಲವರು ದೇವಾಲಯದ ಕುರಿತು ಮಾತಾಡುತ್ತಾ, “ಇದು ಅಂದವಾದ ಕಲ್ಲುಗಳಿಂದಲೂ ಹರಕೆಯ ಕೊಡುಗೆಗಳಿಂದಲೂ ಎಷ್ಟೊಂದು ಸುಂದರವಾಗಿದೆ!” ಎಂದರು.
ಆದರೆ ಯೇಸು ಅವರಿಗೆ, “ನೀವು ಇಲ್ಲಿ ನೋಡುವಂಥದ್ದೆಲ್ಲವೂ ನಾಶವಾಗುವ ಕಾಲ ಬರುವುದು. ಈ ಕಟ್ಟಡಗಳ ಪ್ರತಿಯೊಂದು ಕಲ್ಲನ್ನು ನೆಲಕ್ಕೆ ಕೆಡವಲಾಗುವುದು. ಇಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲುವುದಿಲ್ಲ!” ಎಂದು ಹೇಳಿದನು.
ಶಿಷ್ಯರಲ್ಲಿ ಕೆಲವರು ಯೇಸುವಿಗೆ, “ಗುರುವೇ, ಇವುಗಳೆಲ್ಲಾ ಯಾವಾಗ ಸಂಭವಿಸುತ್ತವೆ? ಆ ಸಮಯವನ್ನು ಯಾವ ಸೂಚನೆಗಳಿಂದ ತಿಳಿದುಕೊಳ್ಳಬೇಕು?” ಎಂದು ಕೇಳಿದರು.
ಯೇಸು ಅವರಿಗೆ, “ಎಚ್ಚರಿಕೆಯಾಗಿರಿ! ಮೋಸ ಹೋಗಬೇಡಿರಿ. ನನ್ನ ಹೆಸರನ್ನು ಹೇಳುತ್ತಾ ಅನೇಕರು ಬರುವರು. ಅವರು, ‘ನಾನೇ ಕ್ರಿಸ್ತನು’ ಎಂದೂ, ‘ಸರಿಯಾದ ಸಮಯ ಬಂದಿದೆ’ ಎಂದೂ ಹೇಳುವರು. ಆದರೆ ಅವರನ್ನು ಹಿಂಬಾಲಿಸಬೇಡಿರಿ. ಯುದ್ಧಗಳ ಬಗ್ಗೆ ಮತ್ತು ದಂಗೆಗಳ ಬಗ್ಗೆ ನೀವು ಕೇಳುವಾಗ ಹೆದರಬೇಡಿರಿ. ಇವುಗಳೆಲ್ಲಾ ಮೊದಲು ಸಂಭವಿಸಬೇಕು. ಆದರೂ ಆ ಕೂಡಲೇ ಅಂತ್ಯ ಬರುವುದಿಲ್ಲ” ಎಂದು ಹೇಳಿದನು.
10 ಬಳಿಕ ಯೇಸು ಅವರಿಗೆ, “ಜನಾಂಗಗಳು ಬೇರೆ ಜನಾಂಗಗಳಿಗೆ ವಿರುದ್ಧವಾಗಿ ಹೋರಾಡುವವು. ರಾಜ್ಯಗಳು ಬೇರೆ ರಾಜ್ಯಗಳಿಗೆ ವಿರುದ್ಧವಾಗಿ ಹೋರಾಡುವವು. 11 ಭೀಕರ ಭೂಕಂಪಗಳಾಗುವವು. ಕ್ಷಾಮಗಳೂ ಉಪದ್ರವಗಳೂ ತಲೆದೋರುವವು. ಭಯಂಕರ ಘಟನೆಗಳೂ ಆಕಾಶದಲ್ಲಿ ಅಪೂರ್ವ ಸೂಚನೆಗಳೂ ಕಾಣಿಸಿಕೊಳ್ಳುವವು.
12 “ಆದರೆ ಈ ಎಲ್ಲಾ ಸಂಗತಿಗಳು ಸಂಭವಿಸುವ ಮೊದಲು, ಜನರು ನಿಮ್ಮನ್ನು ಬಂಧಿಸುವರು ಮತ್ತು ಹಿಂಸಿಸುವರು. ಸಭಾಮಂದಿರಗಳಲ್ಲಿ ಜನರು ನಿಮಗೆ ತೀರ್ಪು ನೀಡಿ ಸೆರೆಮನೆಗೆ ಹಾಕುವರು. ರಾಜರ ಮುಂದೆ ಮತ್ತು ರಾಜ್ಯಪಾಲರ ಮುಂದೆ ನಿಮ್ಮನ್ನು ಬಲವಂತವಾಗಿ ನಿಲ್ಲಿಸುವರು. ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮಗೆ ಹೀಗೆಲ್ಲಾ ಮಾಡುವರು. 13 ಆದರೆ ನನ್ನ ಕುರಿತು ಹೇಳುವುದಕ್ಕೆ ನಿಮಗೆ ಅದು ಸುಸಂದರ್ಭವಾಗಿರುವುದು. 14 ನೀವು ಏನು ಹೇಳಬೇಕೆಂದು ಚಿಂತಿಸಬೇಡಿರಿ. 15 ಏಕೆಂದರೆ ನಾನೇ ನಿಮಗೆ ಜ್ಞಾನವನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ವೈರಿಗಳಲ್ಲಿ ಯಾರೂ ನಿಮ್ಮ ಮಾತಿಗೆ ಪ್ರತ್ಯುತ್ತರವನ್ನು ಕೊಡಲು ಸಾಧ್ಯವಿಲ್ಲ. 16 ನಿಮ್ಮ ತಂದೆತಾಯಿಗಳು, ಸಹೋದರರು, ಸಂಬಂಧಿಕರು ಮತ್ತು ಸ್ನೇಹಿತರು ಸಹ ನಿಮಗೆ ವಿರುದ್ಧವಾಗುವರು. ನಿಮ್ಮಲ್ಲಿ ಕೆಲವರನ್ನು ಅವರು ಕೊಲ್ಲುವರು. 17 ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರೆಲ್ಲರೂ ನಿಮ್ಮನ್ನು ದ್ವೇಷಿಸುವರು. 18 ಆದರೆ ಇವುಗಳಿಂದ ನೀವೇನೂ ನಾಶವಾಗುವುದಿಲ್ಲ. 19 ನೀವು ನಿಮ್ಮ ನಂಬಿಕೆಯಲ್ಲಿ ದೃಢವಾಗಿದ್ದರೆ ನಿಮ್ಮನ್ನು ರಕ್ಷಿಸಿಕೊಳ್ಳುವಿರಿ.
ಜೆರುಸಲೇಮಿನ ನಾಶನ
(ಮತ್ತಾಯ 24:15-21; ಮಾರ್ಕ 13:14-19)
20 “ಜೆರುಸಲೇಮಿನ ಸುತ್ತಲೂ ಸೈನ್ಯಗಳು ಮುತ್ತಿಗೆ ಹಾಕುವುದನ್ನು ನೀವು ನೋಡುವಿರಿ. ಆಗ ಜೆರುಸಲೇಮಿನ ನಾಶನದ ಕಾಲ ಬಂತೆಂದು ನೀವು ತಿಳಿದುಕೊಳ್ಳಿರಿ. 21 ಆ ಕಾಲದಲ್ಲಿ ಜುದೇಯದಲ್ಲಿರುವ ಜನರು ಬೆಟ್ಟಗಳಿಗೆ ಓಡಿಹೋಗಲಿ. ಜೆರುಸಲೇಮಿನಲ್ಲಿರುವ ಜನರು ಬೇಗನೆ ಅಲ್ಲಿಂದ ಪಲಾಯನ ಮಾಡಲಿ. ನೀವು ಪಟ್ಟಣದ ಹತ್ತಿರವಿದ್ದರೂ ಅದರೊಳಗೆ ಹೋಗದಿರಿ! 22 ದೇವರು ತನ್ನ ಜನರನ್ನು ಶಿಕ್ಷಿಸುವ ಕಾಲದ ಬಗ್ಗೆ ಪ್ರವಾದಿಗಳು ಬರೆದಿರುವ ಸಂಗತಿಗಳೆಲ್ಲಾ ಆಗ ನೆರವೇರುತ್ತದೆ. 23 ಆ ಕಾಲದಲ್ಲಿ, ಗರ್ಭಿಣಿ ಸ್ತ್ರೀಯರಿಗೂ ಚಿಕ್ಕ ಕೂಸುಗಳಿರುವವರಿಗೂ ಬಹಳ ಗೋಳಾಟ ಇರುವುದು. ಏಕೆಂದರೆ ಈ ದೇಶವು ಮಹಾವಿಪತ್ತಿಗೆ ಈಡಾಗುವುದು. ದೇವರು ಈ ಜನರ (ಯೆಹೂದ್ಯರ) ವಿಷಯದಲ್ಲಿ ಕೋಪಗೊಂಡಿರುವುದರಿಂದ 24 ಇವರಲ್ಲಿ ಕೆಲವರು ಸೈನಿಕರಿಂದ ಕೊಲ್ಲಲ್ಪಡುವರು. ಇನ್ನು ಕೆಲವರು ಬಂಧಿತರಾಗಿ ಪರದೇಶಕ್ಕೆ ಒಯ್ಯಲ್ಪಡುವರು. ಅನ್ಯದೇಶೀಯರು ತಮ್ಮ ಕಾಲ ಮುಗಿಯುವ ತನಕ ಪರಿಶುದ್ಧ ಪಟ್ಟಣವಾದ ಜೆರುಸಲೇಮಿನಲ್ಲಿ ನಡೆದಾಡುವರು.
ಭಯಪಡಬೇಡಿರಿ
(ಮತ್ತಾಯ 24:29-31; ಮಾರ್ಕ 13:24-27)
25 “ಸೂರ್ಯ, ಚಂದ್ರ ಮತ್ತು ನಕ್ಷತ್ರಗಳಲ್ಲಿ ವಿಚಿತ್ರವಾದ ಸೂಚನೆಗಳು ಕಾಣಿಸಿಕೊಳ್ಳುವವು. ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿ ಹೋಗುವವು. 26 ಗ್ರಹಶಕ್ತಿಗಳು ಕದಲುವುದರಿಂದ ಭೂಮಿಯಲ್ಲಿ ಏನೇನು ಸಂಭವಿಸುವುದೋ ಎಂಬ ಭಯದಿಂದ ಮನುಷ್ಯರು ದಿಗ್ಭ್ರಮೆಗೊಳ್ಳುವರು. 27 ಆಗ ಮನುಷ್ಯಕುಮಾರನು ಮಹಾಶಕ್ತಿಯಿಂದಲೂ ಮಹಿಮಾ ಪ್ರಭಾವದಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ನೋಡುವರು. 28 ಈ ಸಂಗತಿಗಳು ಸಂಭವಿಸುವುದಕ್ಕೆ ತೊಡಗುವಾಗ ಭಯಪಡಬೇಡಿರಿ. ಮೇಲೆ ನೋಡಿ ಸಂತೋಷಪಡಿರಿ! ಚಿಂತೆಮಾಡಬೇಡಿರಿ. ಸಂತೋಷಪಡಿರಿ, ಏಕೆಂದರೆ ದೇವರು ನಿಮ್ಮನ್ನು ಬಿಡುಗಡೆಗೊಳಿಸುವ ಕಾಲ ಸಮೀಪವಾಗಿದೆ ಎಂಬುದಕ್ಕೆ ಅವು ಸೂಚನೆಯಾಗಿವೆ.”
ಯೇಸುವಿನ ಮಾತುಗಳಿಗೆ ಅಳಿವಿಲ್ಲ
(ಮತ್ತಾಯ 24:32-35; ಮಾರ್ಕ 13:28-31)
29 ಬಳಿಕ ಯೇಸು ಈ ಸಾಮ್ಯವನ್ನು ಹೇಳಿದನು: “ಎಲ್ಲಾ ಮರಗಳಲ್ಲಿ ಅಂಜೂರದ ಮರ ಒಳ್ಳೆಯ ಉದಾಹರಣೆಯಾಗಿದೆ. 30 ಅದು ಚಿಗುರುತ್ತಲೇ, ಬೇಸಿಗೆ ಹತ್ತಿರವಾಗಿದೆ ಎಂದು ನೀವು ತಿಳಿದುಕೊಳ್ಳುವಿರಿ. 31 ಅದೇರೀತಿಯಲ್ಲಿ ಈ ಎಲ್ಲಾ ಸಂಗತಿಗಳು ಸಂಭವಿಸುವುದನ್ನು ನೀವು ನೋಡುವಾಗ, ದೇವರ ರಾಜ್ಯವು ಬಹುಬೇಗನೆ ಬರುತ್ತದೆ ಎಂದು ತಿಳಿದುಕೊಳ್ಳುವಿರಿ.
32 “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಈ ಕಾಲದ ಜನರು ಇನ್ನೂ ಜೀವಿಸುತ್ತಿರುವಾಗ ಈ ಸಂಗತಿಗಳೆಲ್ಲಾ ಸಂಭವಿಸುವವು! 33 ಭೂಮ್ಯಾಕಾಶಗಳು ನಾಶವಾಗುವವು; ಆದರೆ ನಾನು ಹೇಳಿದ ಮಾತುಗಳು ಎಂದಿಗೂ ನಾಶವಾಗುವುದಿಲ್ಲ!
ಎಲ್ಲಾ ಸಮಯದಲ್ಲೂ ಸಿದ್ಧರಾಗಿರಿ
34 “ಎಚ್ಚರಿಕೆ! ತಿನ್ನುವುದರಲ್ಲಿಯೂ ಕುಡಿದು ಮತ್ತರಾಗುವುದರಲ್ಲಿಯೂ ಪ್ರಾಪಂಚಿಕ ಚಿಂತೆಗಳಲ್ಲಿಯೂ ಮಗ್ನರಾಗಿರಬೇಡಿರಿ. ಇಲ್ಲವಾದರೆ, ನಿಮ್ಮ ಹೃದಯಗಳು ಭಾರವಾಗಿರುವಾಗಲೇ ಅಂತ್ಯವು ಫಕ್ಕನೆ ಬಂದೀತು. 35 ಆ ದಿವಸವು ಭೂನಿವಾಸಿಗಳೆಲ್ಲರಿಗೂ ವಿಸ್ಮಯಕರವಾಗಿರುವುದು. 36 ಆದ್ದರಿಂದ ಎಲ್ಲಾ ಸಮಯದಲ್ಲಿಯೂ ಸಿದ್ಧರಾಗಿರಿ. ನಡೆಯಲಿರುವ ಈ ಎಲ್ಲಾ ಸಂಗತಿಗಳನ್ನು ಎದುರಿಸಿ ಸುರಕ್ಷಿತವಾಗಿ ಮುಂದುವರಿಯಲು ಮತ್ತು ಮನುಷ್ಯಕುಮಾರನ ಮುಂದೆ ನಿಲ್ಲಲು ಬೇಕಾದ ಶಕ್ತಿಗಾಗಿ ಪ್ರಾರ್ಥಿಸಿರಿ.”
37 ಯೇಸು ಹಗಲೆಲ್ಲಾ ದೇವಾಲಯದಲ್ಲಿ ಜನರಿಗೆ ಉಪದೇಶಿಸುತ್ತಿದ್ದನು. ರಾತ್ರಿಯಲ್ಲಾದರೋ ಪಟ್ಟಣದ ಹೊರಗಿದ್ದ ಆಲಿವ್ ಮರಗಳ ಗುಡ್ಡದ ಮೇಲೆ ಇರುತ್ತಿದ್ದನು. 38 ಪ್ರತಿ ಮುಂಜಾನೆ, ಜನರೆಲ್ಲರೂ ಬೇಗನೆ ಎದ್ದು ದೇವಾಲಯದಲ್ಲಿ ಯೇಸುವಿನ ಉಪದೇಶವನ್ನು ಕೇಳುವುದಕ್ಕೆ ಹೋಗುತ್ತಿದ್ದರು.

*21:2: ಹಣದ ಪೆಟ್ಟಿಗೆ ಜನರು ತಮ್ಮ ಕಾಣಿಕೆಗಳನ್ನು ದೇವರಿಗೆ ಸಮರ್ಪಿಸುವುದಕ್ಕೆ ಯೆಹೂದ್ಯರ ಆರಾಧನೆಯ ಸ್ಥಳದಲ್ಲಿ ಇಡಲ್ಪಟ್ಟ ವಿಶೇಷ ಪೆಟ್ಟಿಗೆ.