12
ರಚನೆಗಾರ: ದಾವೀದ.
ಯೆಹೋವನೇ, ನನ್ನನ್ನು ರಕ್ಷಿಸು!
ಒಳ್ಳೆಯವರೆಲ್ಲಾ ಕೊನೆಗೊಂಡರು.
ಭೂನಿವಾಸಿಗಳಲ್ಲಿ ನಿಜವಾದ ವಿಶ್ವಾಸಿಗಳು ಉಳಿದೇ ಇಲ್ಲ.
ಜನರು ತಮ್ಮ ನೆರೆಯವರಿಗೆ ಸುಳ್ಳು ಹೇಳುವರು.
ಪ್ರತಿಯೊಬ್ಬರೂ ತಮ್ಮ ನೆರೆಯವರಿಗೆ ಸುಳ್ಳಿನಿಂದ ಮುಖಸ್ತುತಿ ಮಾಡುವರು.
ಸುಳ್ಳಾಡುವ ಆ ತುಟಿಗಳನ್ನೂ ಕಟ್ಟುಕಥೆಗಳನ್ನು ಹೇಳುವ
ಆ ನಾಲಿಗೆಗಳನ್ನೂ ಯೆಹೋವನು ಕತ್ತರಿಸಿಹಾಕಲಿ.
“ನಾವು ಪ್ರಮುಖರಾಗಲು ನಮ್ಮ ಸುಳ್ಳುಗಳೇ ನಮಗೆ ಆಧಾರ.
ನಮ್ಮ ನಾಲಿಗೆಗಳು ಇರುವಾಗ ನಮಗೆ ಒಡೆಯರಾಗಲು ಯಾರಿಗೆ ಸಾಧ್ಯ?” ಎಂದು ಅವರು ಹೇಳುತ್ತಾರೆ.
 
ಆದರೆ ಯೆಹೋವನು ಹೇಳುವುದೇನೆಂದರೆ:
“ದುಷ್ಟರು ಕುಗ್ಗಿಹೋದವರಿಂದ ಕದ್ದುಕೊಂಡಿದ್ದಾರೆ.
ಅಸಹಾಯಕರು ದುಃಖದಿಂದ ನಿಟ್ಟುಸಿರು ಬಿಡುತ್ತಿದ್ದಾರೆ.
ಆದ್ದರಿಂದ ನಾನು ಎದ್ದುನಿಂತು, ಆಯಾಸಗೊಂಡಿರುವ ಅವರನ್ನು ಕಾಪಾಡುವೆನು.”
 
ಯೆಹೋವನ ಮಾತುಗಳು
ಬೆಂಕಿಯಲ್ಲಿ ಏಳು ಸಲ ಶುದ್ಧೀಕರಿಸಿದ ಬೆಳ್ಳಿಯಂತೆ ಸತ್ಯವಾಗಿವೆ.
 
ಯೆಹೋವನೇ, ಅಸಹಾಯಕರನ್ನು ಪರಿಪಾಲಿಸು.
ಅವರನ್ನು ಶಾಶ್ವತವಾಗಿ ಸಂರಕ್ಷಿಸು.
ಆ ದುಷ್ಟರು ಪ್ರಮುಖರಂತೆ ವರ್ತಿಸಿದರೂ
ಅವರು ಕೇವಲ ನಕಲಿ ಆಭರಣಗಳಂತಿದ್ದಾರೆ.