3
ಜೀವಿಸಲು ಯೋಗ್ಯವಾದ ಮಾರ್ಗ
ನೀನು ಜನರಿಗೆ ತಿಳಿಸಬೇಕಾದದ್ದೇನೆಂದರೆ: ನಿಮ್ಮ ಅಧಿಪತಿಗಳಿಗೂ ಅಧಿಕಾರಿಗಳಿಗೂ ಅಧೀನರಾಗಿರಿ; ಸಕಲ ಸತ್ಕಾರ್ಯಗಳನ್ನು ಮಾಡಲು ಸಿದ್ಧರಾಗಿರಿ. ಯಾರನ್ನೂ ದೂಷಿಸದೆ, ಯಾರೊಂದಿಗೂ ಜಗಳವಾಡದೆ ಮೃದುವಾಗಿ ಎಲ್ಲರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಿರಿ.
ಮೊದಲು ನಾವು ಸಹ ಅವಿವೇಕಿಗಳಾಗಿದ್ದೆವು. ನಾವು ವಿಧೇಯರಾಗಿರಲಿಲ್ಲ. ನಾವು ಮೋಸಹೋಗಿದ್ದೆವು. ಅನೇಕ ಬಗೆಯ ಆಸೆಗಳಿಗೆ ಮತ್ತು ಭೋಗಗಳಿಗೆ ದಾಸರಾಗಿದ್ದೆವು; ಕೆಟ್ಟದ್ದನ್ನು ಮಾಡುವವರೂ ಹೊಟ್ಟೆಕಿಚ್ಚುಳ್ಳವರೂ ಆಗಿದ್ದೆವು. ಜನರು ನಮ್ಮನ್ನು ದ್ವೇಷಿಸುತ್ತಿದ್ದರು. ನಾವು ಒಬ್ಬರನ್ನೊಬ್ಬರು ದ್ವೇಷಿಸುತ್ತಿದ್ದೆವು. ಆಗ ನಮ್ಮ ರಕ್ಷಕನಾದ ದೇವರ ಪ್ರೀತಿಯೂ ಕೃಪೆಯೂ ಪ್ರತ್ಯಕ್ಷವಾದವು. ಆತನು ನಮ್ಮನ್ನು ರಕ್ಷಿಸಿದ್ದು ತನ್ನ ಕರುಣೆಯಿಂದಲೇ ಹೊರತು ನೀತಿವಂತರಾಗಲು ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದಲ್ಲ. ಆತನು ನಮ್ಮನ್ನು ಸ್ನಾನದ ಮೂಲಕವಾಗಿಯೂ ಪವಿತ್ರಾತ್ಮನ ಮೂಲಕವಾಗಿಯೂ ಹೊಸಬರನ್ನಾಗಿ ಮಾಡಿ ರಕ್ಷಿಸಿದನು. ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮೂಲಕ ದೇವರು ಪವಿತ್ರಾತ್ಮನನ್ನು ನಮ್ಮ ಮೇಲೆ ಸಮೃದ್ಧಿಯಾಗಿ ಸುರಿಸಿದನು. ದೇವರು ತನ್ನ ಕೃಪೆಯಿಂದ ನಮ್ಮನ್ನು ನೀತಿವಂತರನ್ನಾಗಿ ಮಾಡಿದನು. ನಾವು ನಿತ್ಯಜೀವವನ್ನು ಪಡೆಯುವಂತೆ ಆತನು ನಮಗೆ ಪವಿತ್ರಾತ್ಮನನ್ನು ಕೊಟ್ಟನು. ಅದೇ ನಮ್ಮ ನಿರೀಕ್ಷೆ. ಈ ಬೋಧನೆಯು ಸತ್ಯವಾದದ್ದು.
ನೀನು ಜನರಿಗೆ ಈ ಸಂಗತಿಗಳನ್ನು ಒತ್ತಿಹೇಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಆಗ, ದೇವರಲ್ಲಿ ನಂಬಿಕೆ ಇಟ್ಟಿರುವವರು ಜಾಗರೂಕರಾಗಿದ್ದು ತಮ್ಮ ಜೀವನದಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡುವರು. ಇವು ಎಲ್ಲರಿಗೂ ಹಿತಕರವಾಗಿವೆ ಮತ್ತು ಪ್ರಯೋಜನಕರವಾಗಿವೆ.
ಬುದ್ಧಿಯಿಲ್ಲದೆ ಕುತರ್ಕ ಮಾಡುವ ಜನರಿಂದ, ನಿರರ್ಥಕವಾದ ವಂಶಾವಳಿಗಳ ಚರಿತ್ರೆಯ ಬಗ್ಗೆ ಮಾತನಾಡುವ ಜನರಿಂದ, ಮೋಶೆಯು ಬರೆದಿರುವ ಧರ್ಮಶಾಸ್ತ್ರದಲ್ಲಿರುವ ನಿಯಮಗಳ ಬಗ್ಗೆ ತೊಂದರೆಯನ್ನು ಉಂಟುಮಾಡುವ ಮತ್ತು ವಾಗ್ವಾದ ಮಾಡುವ ಜನರಿಂದ ದೂರವಾಗಿರು. ಅವುಗಳಿಗೆ ಯಾವ ಬೆಲೆಯೂ ಇಲ್ಲ, ಅವುಗಳಿಂದ ಜನರಿಗೆ ಯಾವ ಪ್ರಯೋಜನವೂ ಇಲ್ಲ. 10 ಯಾವನಾದರೂ ಭೇದ ಹುಟ್ಟಿಸುತ್ತಿದ್ದರೆ, ಅವನಿಗೆ ಎಚ್ಚರಿಕೆ ನೀಡು. ಅವನಿನ್ನೂ ಮುಂದುವರಿಸಿದರೆ ಮತ್ತೊಮ್ಮೆ ಎಚ್ಚರಿಕೆ ನೀಡು. ಆದರೂ ಅವನು ಕೇಳದೆಹೋದರೆ ಅವನ ಸಹವಾಸವನ್ನು ತೊರೆದುಬಿಡು. 11 ಅಂಥವನು ಕೆಟ್ಟವನೂ ಪಾಪಪೂರಿತನೂ ಆಗಿದ್ದಾನೆ ಎಂಬುದು ನಿನಗೂ ತಿಳಿದಿದೆ. ಅವನು ತನ್ನ ಸ್ವಕಾರ್ಯಗಳಿಂದಲೇ ತಪ್ಪಿತಸ್ಥನೆಂಬ ತೀರ್ಪನ್ನು ಹೊಂದಿದ್ದಾನೆ.
ನೆನಪಿನಲ್ಲಿಡಬೇಕಾದ ಕೆಲವು ಸಂಗತಿಗಳು
12 ನಾನು ನಿನ್ನ ಬಳಿಗೆ ಅರ್ತೆಮನನ್ನು ಮತ್ತು ತುಖಿಕನನ್ನು ಕಳುಹಿಸಿದಾಗ, ನಿಕೊಪೊಲಿಯಲ್ಲಿರುವ ನನ್ನ ಬಳಿಗೆ ಬರಲು ಆದಷ್ಟು ಪ್ರಯತ್ನಿಸು. ನಾನು ಈ ಚಳಿಗಾಲವನ್ನು ಅಲ್ಲಿಯೇ ಕಳೆಯಬೇಕೆಂದಿದ್ದೇನೆ. 13 ವಕೀಲನಾದ ಜೇನನೂ ಅಪೊಲ್ಲೋಸನೂ ಅಲ್ಲಿಂದ ಪ್ರಯಾಣ ಮಾಡುತ್ತಾರೆ. ಅವರ ಪ್ರಯಾಣಕ್ಕೆ ನಿನ್ನಿಂದ ಸಾಧ್ಯವಾದಷ್ಟು ಸಹಾಯಮಾಡು. ಅವರಿಗೆ ಯಾವ ಕೊರತೆಯೂ ಆಗದಂತೆ ನೋಡಿಕೊ. 14 ನಮ್ಮ ಜನರು ತಮ್ಮ ಜೀವನವು ನಿಷ್ಪ್ರಯೋಜಕವಾಗದಂತೆ ಪರೋಪಕಾರವನ್ನು ಕಲಿತುಕೊಂಡು ಕೊರತೆಯಲ್ಲಿರುವವರಿಗೆ ಉಪಕಾರ ಮಾಡಬೇಕು.
15 ಇಲ್ಲಿ ನನ್ನೊಡನೆ ಇರುವ ಜನರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ಕ್ರಿಸ್ತನಲ್ಲಿ ನಂಬಿಕೆ ಇಟ್ಟವರಾಗಿದ್ದು ನಮ್ಮನ್ನು ಪ್ರೀತಿಸುವವರಿಗೆಲ್ಲ ನಮ್ಮ ವಂದನೆ ತಿಳಿಸು.
ದೇವರ ಕೃಪೆಯು ನಿಮ್ಮೊಂದಿಗಿರಲಿ.