೨೦
೧ ಮರುವರುಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಯೋವಾಬನು ಬಲವಾದ ಸೈನ್ಯವನ್ನು ಯುದ್ಧಕ್ಕೆ ಮುನ್ನಡೆಸಿ, ಅಮ್ಮೋನಿಯರ ಪ್ರಾಂತ್ಯಗಳನ್ನು ವಶಪಡಿಸಿಕೊಂಡು ರಬ್ಬಕ್ಕೆ ಹೋಗಿ ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು. ೨ ದಾವೀದನು ಮಲ್ಕಾಮ್ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲ ತೂಕದ್ದು. ಅದರಲ್ಲಿದ್ದ ಅಮೂಲ್ಯವಾದ ಮಣಿಗಳನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಅವನು ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದನು. ೩ ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಕ್ಕೆ ನೇಮಿಸಿದನು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಸರ್ವಸೈನಿಕರೊಡನೆ ಯೆರೂಸಲೇಮಿಗೆ ಬಂದನು.
೪ ಅನಂತರ ಫಿಲಿಷ್ಟಿಯರ ಸಂಗಡ ಗೆಜೆರಿನಲ್ಲಿ ಯುದ್ಧ ನಡೆಯಿತು. ಆಗ ಹುಷ ಊರಿನವನಾದ ಸಿಬ್ಬೆಕೈ ಎಂಬುವವನು ರೆಫಾಯನಾದ ಸಿಪ್ಪೈ ಎಂಬುವವನನ್ನು ಕೊಲ್ಲಲು ಫಿಲಿಷ್ಟಿಯರು ಕುಗ್ಗಿಹೋದರು. ೫ ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಯಾಯೀರನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನ ತಮ್ಮನಾದ ಲಹ್ಮೀಯನನ್ನು ಕೊಂದನು. ಲಹ್ಮೀಯನ ಬರ್ಜಿಯ ಹಿಡಿಕೆಯು ನೇಕಾರರು ಉಪಯೋಗಿಸುವ ದಂಡಿನಷ್ಟು ಗಾತ್ರವಿತ್ತು.
೬ ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು ಅವನ ಕೈಕಾಲುಗಳಿಗೆ ಆರಾರು ಬೆರಳುಗಳಿದ್ದವು. ಅವನೂ ರೆಫಾಯನು. ೭ ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು. ೮ ಗತ್ ಊರಿನವರಾದ ಈ ರೆಫಾಯರು ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.