ಶತ್ರುಗಳಿಂದ ಕಾಪಾಡಬೇಕೆಂಬ ನಿರಪರಾಧಿಯ ಬೇಡಿಕೆ
೧೭
ದಾವೀದನ ಪ್ರಾರ್ಥನೆ.
 
೧ ಯೆಹೋವನೇ, ನ್ಯಾಯವಾದುದನ್ನು ಆಲೈಸು;
ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು;
ಅದು ಕಪಟವಾದ ಬಾಯಿಂದ ಬಂದದ್ದಲ್ಲ.
೨ ನಿನ್ನಿಂದ ನನಗೆ ನ್ಯಾಯವಾದ ತೀರ್ಪು ಉಂಟಾಗಲಿ;
ನೀನು ನೀತಿಗನುಸಾರವಾಗಿ ನೋಡುವವನಲ್ಲವೇ.
೩ ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ, ರಾತ್ರಿಯ ವೇಳೆ ವಿಚಾರಿಸಿದರೂ,
ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ,
ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವುದಿಲ್ಲ;
ನನ್ನ ಬಾಯಿ ಮಾತುಗಳಲ್ಲಿಯೂ ತಪ್ಪಿಲ್ಲ.
೪ ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆ
ನಿನ್ನ ಮಾತನ್ನೇ ಅನುಸರಿಸಿದ್ದೇನೆ.
೫ ನಿನ್ನ ಮಾರ್ಗದಲ್ಲೇ ಹೆಜ್ಜೆಯಿಟ್ಟು ನಡೆಯುತ್ತಾ ಇದ್ದೇನೆ;
ನನ್ನ ಕಾಲು ಜಾರಲಿಲ್ಲ.
೬ ದೇವರೇ, ನನಗೆ ಸದುತ್ತರವನ್ನು ದಯಪಾಲಿಸುವಿಯೆಂದು ಮೊರೆಯಿಡುತ್ತೇನೆ,
ಕಿವಿಗೊಟ್ಟು ಕೇಳು.
೭ ಭುಜಬಲವನ್ನು ಪ್ರಯೋಗಿಸಿ,
ಶರಣಾಗತರನ್ನು ವಿರೋಧಿಗಳಿಂದ ರಕ್ಷಿಸುವಾತನೇ,
ನಿನ್ನ ಪ್ರೀತಿಯನ್ನು ವಿಶೇಷವಾಗಿ ತೋರಿಸು.
೮ ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ,
ಪ್ರಾಣವೈರಿಗಳಿಂದಲೂ ತಪ್ಪಿಸಿದ್ದಿ.
೯ ನಿನ್ನ ರೆಕ್ಕೆಗಳ ಮರೆಯಲ್ಲಿಟ್ಟುಕೊಂಡು ನನ್ನನ್ನು ದುಷ್ಟರಿಂದ ಕಾಯಿ;
ಕಣ್ಣು ಗುಡ್ಡಿನಂತೆಯೇ ಕಾಪಾಡು.
೧೦ ಅವರು ತಮ್ಮ ಹೃದಯವನ್ನು ಕಠಿಣಮಾಡಿದ್ದಾರೆ;
ಅಹಂಕಾರದಿಂದ ಮಾತನಾಡುತ್ತಾರೆ.
೧೧ ನಾವು ಎಲ್ಲಿ ಕಾಲಿಟ್ಟರೂ ಅಲ್ಲೆಲ್ಲಾ ನಮ್ಮನ್ನು ಸುತ್ತಿಕೊಳ್ಳುತ್ತಾರೆ;
ನಮ್ಮನ್ನು ನೆಲಕ್ಕೆ ಬೀಳಿಸಬೇಕೆಂದು ಸಮಯನೋಡುತ್ತಾರೆ.
೧೨ ನನ್ನ ಶತ್ರುವು ಸೀಳಿಬಿಡಲಾಶಿಸುವ ಸಿಂಹದಂತೆಯೂ,
ಮರೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹದಂತೆಯೂ ಇದ್ದಾನೆ.
೧೩ ಯೆಹೋವನೇ, ನೀನು ಅವನಿಗೆ ಎದುರಾಗಿ ನಿಂತು ಅವನನ್ನು ಕೆಡವಿಬಿಡು;
ನಿನ್ನ ಕತ್ತಿಯಿಂದ ನನ್ನ ಪ್ರಾಣವನ್ನು ದುಷ್ಟರಿಗೆ ತಪ್ಪಿಸಿ ಕಾಪಾಡು.
೧೪ ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು
ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು;
ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ.
ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ.
೧೫ ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು.
ನಾನು ಎಚ್ಚತ್ತಾಗ ನಿನ್ನ ನೀತಿಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.