ದುಷ್ಟಾಧಿಕಾರಿಯ ದುಸ್ವಭಾವದ ಖಂಡನೆ
೫೨
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ಅಹೀಮೆಲೆಕನ ಮನೆಗೆ ಬಂದ ವರ್ತಮಾನವನ್ನು ಎದೋಮ್ಯನಾದ ದೋಯೇಗನು ಸೌಲನಿಗೆ ತಿಳಿಸಿದಾಗ ದಾವೀದನು ರಚಿಸಿದ ಪದ್ಯ.
 
೧ ದುಷ್ಟಾಧಿಕಾರಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು?
ದೇವರ ಕೃಪೆಯು ಯಾವಾಗಲೂ ಇರುವುದು.
೨ ಮೋಸಗಾರನೇ, ನಿನ್ನ ನಾಲಿಗೆಯು ಹರಿತವಾದ ಕ್ಷೌರಕತ್ತಿಯಂತೆ
ಅಪಾಯಗಳನ್ನೇ ಕಲ್ಪಿಸುತ್ತದೆ.
೩ ಉಪಕಾರಕ್ಕಿಂತಲೂ ಅಪಕಾರವೇ ನಿನಗೆ ಇಷ್ಟ;
ನೀತಿಯನ್ನು ಬಿಟ್ಟು ಅನೀತಿಯನ್ನು ಸ್ಥಾಪಿಸುವುದೇ ನಿನಗೆ ಸಂತೋಷ.
ಸೆಲಾ
೪ ಮೋಸದ ನಾಲಿಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ.
೫ ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು;
ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು;
ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು.
೬ ನೀತಿವಂತರು ಅದನ್ನು ನೋಡಿ ಭಯಪಡುವರು;
ಅವರು ಪರಿಹಾಸ್ಯಮಾಡುತ್ತಾ,
೭ “ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು,
ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ” ಎಂದು ಹೇಳುವರು.
೮ ಆದರೆ ನಾನು ದೇವಾಲಯದ ಸೊಗಸಾದ ಎಣ್ಣೇ ಮರದಂತಿರುವೆನು;
ದೇವರ ಕೃಪೆಯನ್ನು ಯುಗಯುಗಾಂತರಗಳಲ್ಲಿಯೂ ನಂಬಿಕೊಂಡಿರುವೆನು.
೯ ದೇವರೇ, ನಿನ್ನ ಉಪಕಾರಕ್ಕಾಗಿ ಯಾವಾಗಲೂ ನಿನ್ನನ್ನು ಸ್ತುತಿಸುವೆನು;
ನಿನ್ನ ನಾಮವು ಸರ್ವೋತ್ತಮವೆಂದು ನಿನ್ನ ಭಕ್ತರ ಮುಂದೆ ಹೊಗಳುವೆನು.