ಶತ್ರುಬಾಧಿತನಾದ ಸದ್ಭಕ್ತನ ವಿಜ್ಞಾಪನೆಯೂ ಸ್ತೋತ್ರವೂ
೫೭
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಅಲ್ತಷ್ಖೇತೆಂಬ ರಾಗ; ದಾವೀದನು ಸೌಲನ ಭೀತಿಯಿಂದ ಓಡಿಹೋಗಿ ಗುಹೆಯಲ್ಲಿ ಅಡಗಿಕೊಂಡಿದ್ದಾಗ ರಚಿಸಿದ ಕಾವ್ಯ.
 
೧ ದೇವರೇ, ಕರುಣಿಸು, ನನ್ನನ್ನು ಕರುಣಿಸು.
ನೀನೇ ನನ್ನ ಆಶ್ರಯಸ್ಥಾನವಲ್ಲವೇ!
ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.
೨ ಪರಾತ್ಪರನಾದ ದೇವರಿಗೆ ಮೊರೆಯಿಡುವೆನು,
ನನ್ನ ಕಾರ್ಯವನ್ನು ಸಫಲಮಾಡುವ ದೇವರನ್ನು ಕೂಗಿ ಕರೆಯುವೆನು.
೩ ಆತನು ಪರಲೋಕದಿಂದ ಆಲಿಸಿ,
ನಿಂದಕರ ಮಾತಿನಿಂದ ನನ್ನನ್ನು ತಪ್ಪಿಸುವನು;
ಸೆಲಾ
ತನ್ನ ಪ್ರೀತಿಯನ್ನು ಮತ್ತು ಸತ್ಯತೆಯನ್ನೂ ತೋರ್ಪಡಿಸುವನು.
೪ ಸಿಂಹಗಳ ಮಧ್ಯದಲ್ಲಿ ಸಿಕ್ಕಿದ್ದೇನೆ;
ಬೆಂಕಿಕಾರುವ ಮನುಷ್ಯರ ನಡುವೆ ಬಿದ್ದಿದ್ದೇನೆ.
ಅವರ ಹಲ್ಲುಗಳು ಈಟಿ ಮತ್ತು ಬಾಣಗಳಂತಿವೆ,
ನಾಲಿಗೆಗಳು ಹದವಾದ ಕತ್ತಿಗಳೇ.
೫ ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ;
ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.
೬ ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ;
ನನ್ನ ಪ್ರಾಣವು ಕುಂದಿಹೋಯಿತು.
ನನ್ನ ದಾರಿಯಲ್ಲಿ ಕುಣಿಯನ್ನು ಅಗಿದರು;
ತಾವೇ ಅದರಲ್ಲಿ ಬಿದ್ದುಹೋದರು.
ಸೆಲಾ
೭ ದೇವರೇ, ನನ್ನ ಹೃದಯವು ಸ್ಥಿರವಾಗಿದೆ, ಸ್ಥಿರವಾಗಿದೆ.
ನಾನು ವಾದ್ಯಗಳನ್ನು ನುಡಿಸುತ್ತಾ ಹಾಡುವೆನು.
೮ ನನ್ನ ಮನವೇ, ಚುರುಕಾಗು; ಸ್ವರಮಂಡಲವೇ, ಕಿನ್ನರಿಯೇ, ಎಚ್ಚರವಾಗಿರಿ.
ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು.
೯ ಕರ್ತನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು;
ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು.
೧೦ ಏಕೆಂದರೆ ನಿನ್ನ ಕೃಪೆಯು ಆಕಾಶವನ್ನೂ,
ನಿನ್ನ ಸತ್ಯತೆಯು ಮುಗಿಲನ್ನೂ ಮುಟ್ಟುವಷ್ಟು ದೊಡ್ಡವಾಗಿವೆ.
೧೧ ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ;
ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.