ದೇವರ ಆಶ್ರಯದಲ್ಲಿರುವವರ ಮನಶ್ಯಾಂತಿ
೬೨
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ದಾವೀದನ ಕೀರ್ತನೆ.
 
೧ ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವುದು.
ನನ್ನ ರಕ್ಷಣೆಯು ಆತನಿಂದಲೇ.
೨ ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ;
ನಾನು ಕದಲಿದರೂ ಬೀಳೆನು.
೩ ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು,
ಅವನು ಬಾಗಿದ ಗೋಡೆಯ ಹಾಗೆ ಮತ್ತು ಕುಸಿದ ಪ್ರಾಕಾರವೋ ಎಂಬಂತೆ
ಅವನನ್ನು ಹೊಡೆದು ಕೆಡವಬೇಕೆಂದಿರುವುದು ಇನ್ನೆಷ್ಟರವರೆಗೆ?
೪ ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ.
ಸುಳ್ಳಾಡುವುದು ಅವರಿಗೆ ಅತಿಸಂತೋಷ;
ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ.
ಸೆಲಾ
೫ ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು.
ನನ್ನ ನಿರೀಕ್ಷೆಯು ನೆರವೇರುವುದು ಆತನಿಂದಲೇ.
೬ ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ;
ನಾನು ಕದಲುವುದಿಲ್ಲ.
೭ ನನ್ನ ರಕ್ಷಣೆಗೂ, ಮಾನಕ್ಕೂ ದೇವರೇ ಆಧಾರ;
ನನಗೆ ಬಲವಾದ ದುರ್ಗವೂ, ಆಶ್ರಯವೂ ದೇವರಲ್ಲಿಯೇ.
೮ ಜನರೇ, ಯಾವಾಗಲೂ ಆತನನ್ನೇ ನಂಬಿ,
ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ;
ದೇವರು ನಮ್ಮ ಆಶ್ರಯವು.
ಸೆಲಾ
೯ ನರರು ಬರೀ ಉಸಿರೇ;
ನರಾಧಿಪತಿಗಳು ಬರೀ ಮಾಯವೇ.
ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.
೧೦ ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ;
ಸುಲಿಗೆಯಿಂದ ಗಳಿಸಿ ಅಹಂಕಾರ ಪಡಬೇಡಿರಿ;
ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.
೧೧ ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ,
ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.
೧೨ ಕರ್ತನೇ, ನೀನು ಪ್ರೀತಿಸ್ವರೂಪನಾಗಿ
ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.