ರಾಜಶ್ರೇಷ್ಠನ ಪ್ರತಿಜ್ಞೆ
೧೦೧
ದಾವೀದನ ಕೀರ್ತನೆ.
(ಕೀರ್ತ. 15; 24)
 
೧ ಪ್ರೀತಿ, ನೀತಿಗಳನ್ನು ಕುರಿತು ಹಾಡುವೆನು;
ಯೆಹೋವನೇ, ನಿನ್ನನ್ನು ಕೊಂಡಾಡುವೆನು.
೨ ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು;
ನನಗೆ ಯಾವಾಗ ದರ್ಶನಕೊಡುವಿ?
ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು.
೩ ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ;
ದುರಾಚಾರವನ್ನು ಹಗೆಮಾಡುತ್ತೇನೆ,
ಅದರ ಗೊಡವೆಯೇ ನನಗೆ ಬೇಡ.
೪ ಮೂರ್ಖತನವು ನನ್ನನ್ನು ಬಿಟ್ಟು ಹೋಗಲಿ;
ಕೆಟ್ಟತನವನ್ನು ಅರಿಯದಿರುವೆನು.
೫ ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು;
ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ.
೬ ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು;
ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು,
ಸನ್ಮಾರ್ಗಿಯೇ ನನ್ನ ಸೇವೆಯಲ್ಲಿರಬೇಕು.
೭ ಮೋಸಗಾರನು ನನ್ನ ಮನೆಯಲ್ಲಿ ಇರಲೇಬಾರದು;
ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು.
೮ ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ,
ಪ್ರತಿ ಮುಂಜಾನೆಯಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು.